Wednesday, October 7, 2009

ಸರ್ವಜ್ಞನ ವಚನಗಳು ( ತ್ರಿಪದಿಗಳು )

೧.
ನಂದಿಯನು ಏರಿದನ
ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ
ಮುಂದೆ ಹೇಳುವೆನು ಸರ್ವಜ್ಞ

೨.
ಮುನ್ನ ಕಾಲದಲಿ ಪನ್ನಗಧರನಾಳು
ಎನ್ನೆಯ ಪೆಸರು, ಪುಷ್ಪದತ್ತನು ಎಂದು
ಮನಿಪರು ದಯದಿ ಸರ್ವಜ್ಞ

೩.
ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ
ಮುದವ ಸಾರೆ, ಸರ್ವಜ್ಞನೆಂದೆನಿಸಿ
ನಿಂದವನು ನಾನೆ ಸರ್ವಜ್ಞ

೪.
ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ
ಬಣ್ಣೆಸಿಬರೆದ ಪಟದೊಳಗೆಯಿರುವಾತ
ತಣ್ಣೊಳಗೆ ಇರನೇ ಸರ್ವಜ್ಞ

೫.
ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು
ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ
ಕುಲವನರಸುವರೆ ಸರ್ವಜ್ಞ

೬.
ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ
ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ
ಕುಲವಾವುದಯ್ಯ ಸರ್ವಜ್ಞ

೭.
ಸರ್ವಜ್ಞನೆಂಬುವನು ಗರ್ವದಿಂದಾದವನೆ ?
ಸರ್ವರೊಳಗೊಂದು ನುಡಿಗಲಿತು ವಿದ್ಯೆಯ
ಪರ್ವತವೇ ಆದ ಸರ್ವಜ್ಞ

೮.
ಗುರುವಿನಾ ವಿಸ್ತರದ, ಪರಿಯನಾನೇನೆಂಬೆ
ಮೆರೆವ ಬ್ರಹ್ಮಾಂಡದೊಳಹೊರಗೆ
ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ

೯.
ಊರಿಂಗೆ ದಾರಿಯನು ಆರು ತೋರಿದರೇನು?
ಸಾರಾಯದಾ ನಿಜವ ತೋರುವ ಗುರುವು ತಾ
ನಾರಾದರೇನು? ಸರ್ವಜ್ಞ

೧೦.
ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು
ಪರದೇಶಿಯಂತೆ ಇರುತಿರ್ಪಯೋಗಿಯನು
ಪರಮಗುರುವೆಂಬೆ ಸರ್ವಜ್ಞ

೧೧.
ಹರನಿಚ್ಛೆಯಿಲ್ಲದಲೆ ಹರಿದು ಹೋಗದು ಪಾಪ
ಹರಭಕ್ತಿಯುಳ್ಳ ಗುರುವರನು ಓರ್ವನೇ
ನರ ದೈವವೆಂಬೆ ಸರ್ವಜ್ಞ

೧೨.
ಬಂಧುಗಳು ಆದವರು ಬಂದುಂಡು ಹೋಗುವರು
ಬಂಧನವ ಕಳೆಯಲರಿಯರಾ ಗುರುವಿಗಿಂತ
ಬಂಧುಗಳುಂಟೆ ಸರ್ವಜ್ಞ

೧೩.
ಜೀವ, ಸದ್ಗುರುನಾಥ, ಕಾಯ ಪುಸಿಯನೆ ತೋರಿ
ಮಾಯನಾಶವನು ಹರಿಸುತ್ತ ಶಿಷ್ಯಂಗೆ
ತಾಯಿಯಂತಾದ ಸರ್ವಜ್ಞ

೧೪.
ತಂದೆಗೂ ಗುರುವಿಗೂ ಒಂದು ಅಂತರವುಂಟು
ತಂದೆ ತೋರುವನು ಸದ್ಗುರುವ. ಗುರುರಾಯ
ಬಂಧನವ ಕಳೆವ ಸರ್ವಜ್ಞ

೧೫.
ಗುರುವಿಂಗೆ ದೈವಕ್ಕೆ, ಹಿರಿದು ಅಂತರವುಂಟು
ಗುರುತೋರ್ವ ದೈವದೆಡೆಯನು ದೈವತಾ
ಗುರುವ ತೋರುವನೇ? ಸರ್ವಜ್ಞ

೧೬.
ಗುರುಪಾದಕೆರಗಿದರೆ, ಶಿರಸು ತಾ ಮಣಿಯಕ್ಕು
ಪರಿಣಾಮವಕ್ಕು ಪದವಕ್ಕು ಕೈಲಾಸ
ನೆರಮನೆಯಕ್ಕು ಸರ್ವಜ್ಞ

೧೭.
ಒಂದರೊಳಗೆಲ್ಲವು ಸಂದಿಸುವದನು ಗುರು
ಚಂದದಿಂ ತೋರಿಕೊಡದಿರಲು ಶೊಷ್ಯನವ
ಕೊಂದನೆಂದರಿಗು ಸರ್ವಜ್ಞ

೧೮.
ಲಿಂಗಕ್ಕೆ ಕಡೆ ಎಲ್ಲಿ, ಲಿಂಗದೆಡೆ ಎಲ್ಲಿ
ಲಿಂಗದೊಳು ಜಗವು ಅಡಗಿಹುದು ಲಿಂಗವನು
ಹಿಂಗಿದವರುಂಟೆ? ಸರ್ವಜ್ಞ

೧೯.
ದೆಶಕ್ಕೆ ಸಜ್ಜನನು, ಹಾಸ್ಯಕ್ಕೆ ಹನುಮಂತ
ಕೇಶವನು ಭಕ್ತರೊಳಗೆಲ್ಲ ಮೂರು ಕ
ಣ್ಣೇಶನೆ ದೈವ ಸರ್ವಜ್ಞ

೨೦.
ಉಂಬಳಿಯ ಇದ್ದವನು ಕಂಬಳಿಯ ಹೊದೆಯುವನೇ?
ಶಂಭುವಿರಲಿಕ್ಕೆ ಮತ್ತೊಂದು ದೈವವ
ನಂಬುವನೇ ಹೆಡ್ಡ ಸರ್ವಜ್ಞ

೨೧.
ಅಂಜದಲೆ ಕೊಂಡಿಹರೆ ನಂಜು ಅಮೃತವದಕ್ಕು
ಅಂಜಿ ಅಳುಕುತಲಿ ಕೊಂಡಿಹರೆ, ಅಮೃತವು
ನಂಜಿನಂತಕ್ಕು ಸರ್ವಜ್ಞ

೨೨.
ಎಂಜಲೂ ಅಶೌಚ
ಸಂಜೆಯೆಂದೆನಬೇಡ ಕುಂಜರವು ವನವ ನೆನವಂತೆ ಬಿಡದೆನಿ
ರಂಜನನ ನೆನೆಯೊ ಸರ್ವಜ್ಞ

೨೩.
ಭೂತೇಶಗೆರಗುವನು ಜಾತಿ ಮಾದಿಗನಲ್ಲ
ಜಾತಿಯಲಿ ಹುಟ್ಟಿ ಶಿವನಿಗೆ ಶರಣೆನ್ನ
ದಾತ ಮಾದಿಗನು ಸರ್ವಜ್ಞ

೨೪.
ಕುಲಗೆಟ್ಟವರು ಚಿಂತೆ ಯೊಳಗಿಪ್ಪರಂತಲ್ಲ
ಕುಲಗೆಟ್ಟು ಶಿವನ ಮರೆಹೊಕ್ಕ ಋಷಿಗಳಿಗೆ
ಕುಲಗೋತ್ರವುಂಟೆ? ಸರ್ವಜ್ಞ

೨೫.
ಜಾತಿಹೀನನ ಮನೆಯ ಜ್ಯೊತಿ ತಾ ಹೀನವೆ?
ಜಾತಂಗೆ ಜಾತನೆನಲೇಕೆ? ಅರುವಿಡಿ
ದಾತನೇ ಜಾತ ಸರ್ವಜ್ಞ

೨೬.
ಯಾತರ ಹೂವೇನು ? ನಾತವಿದ್ದರೆ ಸಾಕು
ಜಾತಿಯಲಿ ಜಾತಿಯೆನಬೇಡ ಶಿವನೊಲಿ
ದಾತನೆ ಜಾತ ಸರ್ವಜ್ಞ

೨೭.
ಅಕ್ಕರವು ತರ್ಕಕ್ಕೆ ಲೆಕ್ಕವು ಗಣಿತಕ್ಕೆ
ಮಿಕ್ಕವೋದುಗಳು ತಿರುಪೆಗೆ ಮೋಕ್ಷಕಾ
ರಕ್ಕರವೇ ಸಾಕು ಸರ್ವಜ್ಞ

೨೮.
ಎಲ್ಲರನು ನೆರೆ ಬೇಡಿ, ಹಲ್ಲು ಬಾಯ್ದೆರೆಯುವರೇ?
ಬಲ್ಲಿದಾ ಶಿವನ ಭಜಿಸಿದರೆ ಶಿವ ತಾನು
ಇಲ್ಲೆನ್ನಲರಿಯನು ಸರ್ವಜ್ಞ

೨೯.
ಇಂದ್ರನಾನೆಯನೇರಿ ಒಂದನೂ ಕೊಡಲರಿಯ
ಚಂದ್ರಶೇಖರನು ಮುದಿ ಎತ್ತನೇರಿ ಬೇ
ಕೆಂದುದನು ಕೊಡುವ ಸರ್ವಜ್ಞ

೩೦.
ಸಾರವನು ಬಯಸುವರೆ, ಕ್ಷಾರವನು ಬೆರಿಸುವುದು
ಮಾರಸಂಹರನ ನೆನೆದರೆ ಮೃತ್ಯುವು
ದೂರಕ್ಕೆ ದೂರ ಸರ್ವಜ್ಞ

೩೧.
ಕಾಯ ಕಮಲದ ಸಜ್ಜೆ, ಜೀವರತನುವೆ ಲಿಂಗ
ಭವ ಪುಶ್ಪದಿಂ ಶಿವಪೂಜೆ ಮಾಡುವರ
ದೇವರೆಂದೆಂಬೆ ಸರ್ವಜ್ಞ

೩೨.
ಓದು ವಾದಗಳೇಕೆ, ಗಾದಿಯ ಮಾತೇಕೆ
ವೇದ ಪುರಾಣ ನಿನಗೇಕೆ? ಲಿಂಗದಾ
ಹಾದಿಯರಿದವಗೆ ಸರ್ವಜ್ಞ

೩೩.
ಒಪ್ಪಾದ ನುಡಿಯೇಕೆ? ಪುಷ್ಪವೇರಿಸಲೇಕೆ?
ಅರ್ಪಿತನ ಗೊಡವೆ ತನಗೇಕೆ? ಲಿಂಗದ
ನೆಪ್ಪನರಿದವಗೆ ಸರ್ವಜ್ಞ

೩೪.
ಗಂಗೆ ಗೋದಾವರಿಯು, ತುಂಗಭದ್ರೆಯು ಮತ್ತೆ
ಹಿಂಗದೆ ಮುಳುಗಿ ಫಲವೇನು? ನಿನ್ನಲ್ಲೆ
ಲಿಂಗದರುವಿಲ್ಲ ಸರ್ವಜ್ಞ

೩೫.
ಮೆಟ್ಟಿದಾ ಕಲ್ಲಿಂಗೆ, ಮೊಟ್ಟೆ ಪತ್ರಿಯ ಹಾಕಿ
ಕಟ್ಟಿದಾ ಲಿಂಗ ಅಡಿಮಾಡಿ ಶರಣೆಂಬ
ಭ್ರಷ್ಟನ ಕಂಡ್ಯಾ ? ಸರ್ವಜ್ಞ

೩೬.
ಗುರುವಿಂದ ಬಂಧುಗಳು, ಗುರುವಿಂದ ದೈವಗಳು
ಗುರುವಿಂದಲಿಹುದು ಪುಣ್ಯವದು, ಜಗಕೆಲ್ಲ
ಗುರುವಿಂದ ಮುಕ್ತಿ ಸರ್ವಜ್ಞ

೩೭.
ಶಿವಪೂಜೆ ಮಾಡಿದಡೆ, ಶಿವನ ಕೊಂಡಾಡಿದಡೆ
ಶಿವನಲ್ಲಿ ನೆನೆಹ ನಿಲಿಸಿದಡೆ ಶಿವಲೋಕ
ವವಗೆ ಕಾಣಯ್ಯ ಸರ್ವಜ್ಞ

೩೮.
ನಿಷ್ಠೆ ಇದ್ದಡೆ ಶಿವನು, ಗಟ್ಟಿಗೊಂಡೊಳಗಿರ್ಪ
ನಿಷ್ಠೆಯಿಲ್ಲದಲೆ ಭಜಿಸಿದೊಡೆ ಶಿವನವನ
ಬಿಟ್ಟು ಬಯಲಪ್ಪ ಸರ್ವಜ್ಞ

೩೯.
ಇಟ್ಟಾವಿಭೂತಿ ತಾ ಪಟ್ಟಗಟ್ಟಿರುತಿಕ್ಕು
ಇಟ್ಟಾವಿಭೂತಿಯರಿಯದಿರೆ ಸೀಳಿದಾ
ಬಟ್ಟೆಯಂತಕ್ಕು ಸರ್ವಜ್ಞ

೪೦.
ಲಿಂಗದಲಿ ಮನವಾಗಿ, ಲಿಂಗದಲಿ ನೆನಹಾಗಿ
ಲಿಂಗದಲಿ ನೋಟ, ನುಡಿಕೂಟವಾದವನು
ಲಿಂಗವೇ ಅಕ್ಕು ಸರ್ವಜ್ಞ

೪೧.
ದೇಹಿಯನಬೇಡ, ನಿರ್ದೇಹಿ ಜಂಗಮಲಿಂಗ
ದೇಹ ಗುಣದಾಸೆಯಳಿದೊಡೆ ಆತ ನೀರ್ದೇಹಿ
ಕಾಣಯ್ಯ ಸರ್ವಜ್ಞ

೪೨.
ವಂಶವನು ಪುಗನೆಂದಿ, ಗಾಶಿಸನು ಪರಧನವ
ಸಂಶಯವನಳಿದ ನಿಜಸುಖಿ ಮಹಾತ್ಮನು
ಹಿಂಸೆಗೊಡಬಡನು ಸರ್ವಜ್ಞ

೪೩.
ಅರ್ಪಿತದ ಭೇದವನು
ತಪ್ಪದೆಲೆ ತಿಳಿದಾತ ಸರ್ಪಭುಷಣನ ಸಮನಹನು ನಿಜಸುಖದೋ
ಳೊಪ್ಪುತ್ತಲಿಹನು ಸರ್ವಜ್ಞ

೪೪.
ಭೋಗಿಸುವ ವಸ್ತುಗಳ ಭೋಗಿಸು ಶಿವಗಿತ್ತು
ರಾಗದಿಂ ಸತ್ಯವೆರಸಿಹ ಪ್ರಸಾದಿಯ
ಶ್ರಿ ಗುರುವು ಎಂಬೆ ಸರ್ವಜ್ಞ

೪೫.
ಲಿಂಗವಿರಹಿತನಾಗಿ ನುಂಗದಿರು ಏನುವನು
ತಿಂಗಳಲಿ ಸತ್ತ ಕೊಳೆ ನಾಯಿ ಮಾಂಸವನು
ನುಂಗಿದೆಂತಕ್ಕು ಸರ್ವಜ್ಞ

೪೬.
ಅಂಜದಲೆ ಕೊಂಡಿಹರೆ, ನಂಜು ಅಮೃತವದಕ್ಕು
ಅಂಜಿ, ಅಳುಕುತಲಿ ಕೊಂಡಿಹರೆ ಅಮೃತವು
ನಂಜಿನಂತಕ್ಕು ಸರ್ವಜ್ಞ

೪೭.
ಸಿರಿಯು ಬಂದರೆ ಲೇಸು, ತೀರದ ಜವ್ವನ ಲೇಸು
ಮರಣವಿಲ್ಲದಾ ಮಗಲೇಸು ಲಿಂಗಕ್ಕೆ
ಶರಣುವೆ ಲೇಸು ಸರ್ವಜ್ಞ

೪೮.
ಸೋಕಿಡಾ ಸುಖಂಗಳ
ನೇಕವನು ಶಿವಗಿತ್ತು
ತಾ ಕಿಂಕರತೆಯ ಕೈಕೊಂಡ ಮನುಜನೇ ಲೋಕಕ್ಕೆ ಶರಣ ಸರ್ವಜ್ಞ

೪೯.
ಮಲಯಜದ ಮರದೊಳಗೆ ಸಲೆ ಗಂಧವಿಪ್ಪಂತೆ
ಸುಲಲಿತವು ಆದ ಶರಣರಾಹೃದಯದಲಿ
ನೆಲಸಿಹನು ಶಿವನು ಸರ್ವಜ್ಞ

೫೦.
ಕಿಚ್ಚಿನೊಳು ಸುಘೃತವು, ಒಚ್ಚತದಿ ಕರ್ಪುರವು
ಅಚ್ಚಳಿದು ನಿಜದಿ ನಿಂದಂತೆ, ಭೇದವನು
ಮುಚ್ಚುವನೆ ಶರಣ ಸರ್ವಜ್ಞ

೫೧.
ಗಂಗೆಯಾ ತಡೆ ಲೇಸು, ಮಂಗಳನ ಬಲ ಲೇಸು
ಜಂಗಮ ಭಕ್ತನಾ ನಡೆ ಲೇಸು, ಶರಣರಾ
ಸಂಗವೇ ಲೇಸು ಸರ್ವಜ್ಞ

೫೨.
ಆಕಾಶಪಥ ಮೀರಿ, ದೇಕವಸ್ತುವ ತಿಳಿದು
ಸಾಕಾರವಳಿದು ನಿಜವಾದ ಐಕ್ಯಂಗೆ
ಏಕತ್ರ ನೋಡು ಸರ್ವಜ್ಞ

೫೩.
ನಾನು-ನೀನುಗಳದು, ತಾನು ಲಿಂಗದಿ ಉಳಿದು
ನಾನಾ ಭ್ರಮೆಗಳ ಅತಿಗಳೆದು ನಿಂದಾತ
ತಾನೈಕ್ಯ ನೋಡು ಸರ್ವಜ್ಞ

೫೪.
ಹೀನಂಗೆ ಗತಿಯಿಲ್ಲ, ದೀನಗನುಚಿತವಲ್ಲ
ಏನು ಇಲ್ಲದವಗೆ ಭಯವಿಲ್ಲ ಐಕ್ಯಂಗೆ
ತಾನೆಂಬುದಿಲ್ಲ ಸರ್ವಜ್ಞ

೫೫.
ಆಗಿಲ್ಲ ಹೋಗಿಲ್ಲ, ಮೇಗಿಲ್ಲ ಕೆಳಗಿಲ್ಲ
ತಾಗಿಲ್ಲ ತಪ್ಪು ತಡೆಯಿಲ್ಲ ಲಿಂಗಕ್ಕೆ
ದೇಗುಲವೆ ಇಲ್ಲ ಸರ್ವಜ್ಞ

೫೬.
ಅಲಸದಾ ಶಿವಪೂಜೆ ಹುಲುಸುಂಟು ಕೇಳಯ್ಯ
ಬಲುಕವಲು ಒಡೆದು ಬೇರಿಂದ ತುದಿತನಕ
ಹಲಸು ಕಾತಂತೆ ಸರ್ವಜ್ಞ

೫೭.
ಉಂಡುಂಡು ತಿರುಗುವಾ ಭಂಡರಾ ಕಳೆ ಬೇಡ
ಕಂಡು ಲಿಂಗವನು ಪೂಜಿಸಿದವಗೆ ಯಮ
ದಂಡ ಕಾಣಯ್ಯ ಸರ್ವಜ್ಞ

೫೮.
ಆತುಮದ ಲಿಂಗವನು
ಪ್ರೀತಿಯಲಿ ಪೂಜಿಪಗೆ ಆತಂಕವಿಲ್ಲ ಭಯವಿಲ್ಲ
ದಶವಿಧದ ಪಾತಕಗಳಿಲ್ಲ ಸರ್ವಜ್ಞ

೫೯.
ಲಿಂಗವನು ಅಂದವನ ಅಂಗ ಹಿಂಗಿರಬೇಕು
ತೆಂಗಿನಕಾಯಿ ಪರಿಪೂರ್ಣ ಬಲಿದು ಜಲ
ಹಿಂಗಿದಪ್ಪಂದ ಸರ್ವಜ್ಞ

೬೦.
ಅಂಗವನು ಲಿಂಗವನು ಸಂಗೊಳಿಸಲೆಂತಕ್ಕು
ಲಿಂಗದಾ ನೆನಹು ಘನವಾಗೆ ಶಿವಲಿಂಗ
ಹಿಂಗಿರದು ಅವನ ಸರ್ವಜ್ಞ

೬೧.
ಒಮ್ಮನದ ಶಿವಪೂಜೆ ಗಮ್ಮನೆ ಮಾಡುವದು
ಇಮ್ಮನವ ಪಿಡಿದು ಕೆಡಬೇಡ ವಿಧಿವಶವು
ಸರಿಮ್ಮನೇ ಕೆಡಗು ಸರ್ವಜ್ಞ

೬೨.
ಅಷ್ಟವಿಧದರ್ಚನೆಯ ನೆಷ್ಟು ಮಾಡಿದರೇನು?
ನಿಷ್ಠೆ ನೆಲೆಗೊಳದೆ ಭಜಿಸುವಾ ಪೂಜೆ ತಾ
ನಷ್ಟ ಕಾಣಯ್ಯ ಸರ್ವಜ್ಞ

೬೩.
ಇಷ್ಟಲಿಂಗದಿ ಮನವ ನೆಟ್ಟನೆಯ ನಿಲಿಸದಲೆ
ಕಷ್ಟಭ್ರಮೆಗಳಲಿ ಮುಳುಗಿದನು ಕರ್ಮದಾ
ಬಟ್ಟೆಗೆ ಹೋಹ ಸರ್ವಜ್ಞ

೬೪.
ಎಷ್ಟು ಬಗೆಯಾರತಿಯ ಮುಟ್ಟಿಸಿದ ಫಲವೇನು?
ನಿಷ್ಠೆಯಿಲ್ಲದವನ ಶಿವಪೂಜೆ ಹಾಳೂರ
ಕೊಟ್ಟಗುರಿದಂತೆ ಸರ್ವಜ್ಞ

೬೫.
ಒಸೆದೆಂಟು ದಿಕ್ಕಿನಲ್ಲಿ ಮಿಸುನಿ ಗಿಣ್ಣಲು ಗಿಂಡಿ
ಹಸಿದು ಮಾಡುವನ ಪೂಜೆಯದು ಬೋಗಾರ
ಪಸರ ವಿಟ್ಟಂತೆ ಸರ್ವಜ್ಞ

೬೬.
ಬತ್ತಿ ಹೆತ್ತುಪ್ಪವನು ಹತ್ತಿಸಿದ ಫಲವೇನು?
ನಿತ್ಯ ನೆಲೆಗೊಳದೆ ಭಜಿಸುವಾ ಪೂಜೆ ತಾ
ಹತ್ತಿಗೇಡೆಂದ ಸರ್ವಜ್ಞ

೬೭.
ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಳು
ಕ್ಷಣಕ್ಕೊಮ್ಮೆ ಒಂದನೆಣಿಸುವಾ ಜಪಕೊಂದು
ಕುಣಿಕೆಯುಂಟೆಂದ ಸರ್ವಜ್ಞ

೬೮.
ಎಣಿಸುತಿರ್ಪುದು ಬೆರಳು
ಗುಣಿಸುತಿರ್ಪುದು ಜಿಹ್ವೆ ಮನಹೋಗಿ ಹಲವ ನೆನೆದರದು ಹಾಳೂರ
ಶುನಕನಂತಕ್ಕು ಸರ್ವಜ್ಞ

೬೯.
ಕೊಲುವ ಕೈಯೊಳು ಪೂಜೆ, ಮೆಲುವ ಬಾಯೊಳು ಮಂತ್ರ
ಸಲೆ ಪಾಪವೆರೆದ ಮನದೊಳಗೆ ಪೂಜಿಪನೆ
ಹೊಲೆಯ ಕಾಣಯ್ಯ ಸರ್ವಜ್ಞ

೭೦.
ಲಿಂಗಪೂಜಿಸುವಾತ ಜಂಗಮಕ್ಕೆ ನೀಡಿದೊಡೆ
ಲಿಂಗದಾ ಕ್ಷೇಮ ಘನವಾಗಿ ಆ ಲಿಂಗ
ಹಿಂಗದಿರುತಿಹುದು ಸರ್ವಜ್ಞ

೭೧.
ಲಿಂಗಕ್ಕೆ ತೋರಿಸುತ ನುಂಗುವಾತನೇ ಕೇಳು
ಲಿಂಗವುಂಬುವದೆ ? ಇದನರಿದು ಕಪಿಯೆ ನೀ
ಜಂಗಮಕೆ ನೀಡು ಸರ್ವಜ್ಞ

೭೨.
ಲಿಂಗಪ್ರಸಾದವನು ಅಂಗಕ್ಕೆ ಕೊಂಬುವರು
ಗಂಗಾಳದೊಳಗೆ ಕೈ ತೊಳೆದು ಚಲ್ಲುವಾ
ಮಂಗಗಳ ನೋಡು ಸರ್ವಜ್ಞ

೭೩.
ಹಲವನೋದಿದಡೇನು? ಚೆಲುವನಾದದಡೇನು ?
ಕುಲವೀರನೆನೆಸಿ ಫಲವೇನು? ಲಿಂಗದಾ
ಒಲುಮೆ ಇಲ್ಲದಲೆ ಸರ್ವಜ್ಞ

೭೪.
ಓದುವಾದಗಳೇಕೆ ? ಗಾದೆಯ ಮಾತೇಕೆ?
ವೇದ ಪುರಾಣವು ನಿನಗೇಕೆ ಲಿಂಗದಾ
ಹಾದಿಯರಿಯದಲೆ ಸರ್ವಜ್ಞ

೭೫.
ಕಂಡವರ ಕಂಡು ತಾ ಕೊಂಡ ಲಿಂಗವ ಕಟ್ಟಿ
ಕೊಂಡಾಡಲರಿಯದಧಮಂಗೆ ಲಿಂಗವದು
ಕೆಂಡದಂತಿಹುದು ಸರ್ವಜ್ಞ

೭೬.
ಕಟ್ಟಲೂ ಬಿಡಲು ಶಿವ ಬಟ್ಟಲವ ಕದ್ದನೇ
ಕಟ್ಟಲೂ ಬೇಡ ಬಿಡಲೂ ಬೇಡ
ಕಣ್ಣು ಮನ ನಟ್ಟರೆ ಸಾಕು ಸರ್ವಜ್ಞ

೭೭.
ಆ ದೇವ ಈ ದೇವ ಮಹಾದೇವನೆನಬೇಡ
ಆ ದೇವರ ದೇವ ಭುವನದಾ ಪ್ರಾಣಿಗಳಿ
ಗಾದವನೇ ದೇವ ಸರ್ವಜ್ಞ

೭೮.
ಚಿತ್ರವನು ನವಿಲೊಳು ವಿ ಚಿತ್ರವನು ಗಗನದೊಳು
ಪತ್ರ ಪುಷ್ಪಗಳ ವಿವಿಧವರ್ಣಗಳಿಂದ
ಚಿತ್ರಿಸಿದರಾರು ಸರ್ವಜ್ಞ

೭೯.
ಇಂಗಿನನೊಳು ನಾತವನು ತೆಂಗಿನೊಳಗೆಳೆ ನೀರು
ಭ್ರಂಗ ಕೋಗಿಲೆಯ ಕಂಠದೊಳು ಗಾಯನವ
ತುಂಬಿದವರಾರು ಸರ್ವಜ್ಞ

೮೦.
ಕಳ್ಳಿಯೊಳು ಹಾಲು, ಮುಳು ಗಳ್ಳಿಯೊಳು ಹೆಜ್ಜೇನು
ಎಳ್ಳಿನೊಳಗೆಣ್ಣೆ ಹನಿದಿರಲು, ಶಿವಲೀಲೆ
ಸುಳ್ಳೆನ್ನಬಹುದೆ? ಸರ್ವಜ್ಞ

೮೧.
ಎಲ್ಲ ದೈವವ ಬೇಡಿ ಹುಲ್ಲು ಬಾಯ್ತೆರೆಯದೆಲೆ
ಬಲ್ಲ ದಾಶಿವನ ಭಜಿಸಿ ಬೇಡಿದಾತ
ಇಲ್ಲೆನಲಿಕರಿಯ ಸರ್ವಜ್ಞ

೮೨.
ಆದಿ ದೈವವನು ತಾ ಭೇದಿಸಲಿ ಕರಿಯದಲೆ
ಹಾದಿಯಾಕಲ್ಲಿಗೆಡೆಮಾಡಿ ನಮಿಸುವಾ
ಮಾದಿಗರ ನೋಡು ಸರ್ವಜ್ಞ

೮೩.
ತನ್ನಲಿಹ ಲಿಂಗವನು ಮನ್ನಿ ಸಲಿಕರಿಯದಲೆ
ಬಿನ್ನಣದಿ ಕಟಿದ ಪ್ರತಿಮೆಗಳಿಗೆರಗುವಾ
ಅನ್ಯಾಯ ನೋಡು ಸರ್ವಜ್ಞ

೮೪.
ಉಣಬಂದ ಜಂಗಮಕೆ ಉಣಬಡಿಸಲೊಲ್ಲದಲೆ
ಉಣದಿಪ್ಪ ಲಿಂಗಕುಣಬಡಿಸಿ ಕೈಮುಗಿವ
ಬಣಗುಗಳ ನೋಡ ಸರ್ವಜ್ಞ

೮೫.
ಕಲ್ಲು ಕಲ್ಲೆಂಬುವಿರಿ ಕಲ್ಲೊಳಗಿರ್ಪುದೇ ದೈವ
ಕಲ್ಲಲ್ಲಿ ಕಳೆಯನಿಲಿಸಿದಾ ಗುರುವಿನಾ
ಸೊಲ್ಲೇದೈವ ಸರ್ವಜ್ಞ

೮೬.
ಗುಡಿಯ ಬೋದಿಗೆ ಕಲ್ಲು
ನಡುರಂಗ ತಾ ಕಲ್ಲು ಕಡೆಮೂಲೆ ಸೆರಗು ತಾ ಕಲ್ಲು ವರವನ್ನು
ಕೊಡುವಾತ ಬೇರೆ ಸರ್ವಜ್ಞ

೮೭.
ಪ್ರಾಣನೂ ಪರಮಮನು ಕಾಣದಲೆ ಒಳಗಿರಲು
ಮಾಣದೇ ಸಿಲೆಯ ಹಿಡಿದದಕೆ ಮೂರ್ಖ ತಾ
ಪ್ರಾಣಾತ್ಮನೆಂಬ ಸರ್ವಜ್ಞ

೮೮.
ಕಲ್ಲು ಗುಂಡಿನ ಮೇಲೆ ಮಲ್ಲಿಗೆಯ ಅರಳಿಕ್ಕಿ
ನಿಲ್ಲದಲೆ ಹಣೆಯ ಬಡಿವರ್ಗೆ ಬುಗುಟಿಲ್ಲ
ದಿಲ್ಲ ಕಾಣಯ್ಯ ಸರ್ವಜ್ಞ

೮೯.
ಉತ್ಪತ್ತಿಗೆ ಬೊಮ್ಮಗಡ ಸ್ಥಿತಿಗೆ ವಿಷ್ಣುಗಡ
ಹತವ ಗೈವುದಕ್ಕೆ ರುದ್ರಗಣ, ಇವರುಗಳ
ಸ್ಥಿತಿಯನರಿಯೆಂದ ಸರ್ವಜ್ಞ

೯೦.
ಬೊಮ್ಮನಿರ್ಮಿಪನೆಂಬ ಮರ್ಮತಿಯ ನೀ ಕೇಳು
ಬೊಮ್ಮನಾ ಸತಿಗೆ ಮೂಗಿಲ್ಲವಾಮೂಗ
ನಿರ್ಮಿಸನದೇಕೆ ಸರ್ವಜ್ಞ

೯೧.
ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ
ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು
ಹುಟ್ಟಿಸನದೇಕೆ ಸರ್ವಜ್ಞ

೯೨.
ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು
ಮತ್ತೆ ಪಾಂಡವರಿಗಾಳಾದ ಹರಿಯು ತಾ
ನೆತ್ತಣಾ ದೈವ ಸರ್ವಜ್ಞ

೯೩.
ನರಸಿಂಹನವತಾರ
ಹಿರಿದಾದ ಅದ್ಭುತವು
ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ

೯೪.
ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ
ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ
ಪಾಲಿಸದೆ ಹೋದ ಸರ್ವಜ್ಞ

೯೫.
ಹರನವನ ಕೊಲುವಂದು, ಎರಳೆಯನು ಎಸೆವಂದು
ಮರಳಿ ವರಗಳನು ಕೊಡುವಂದು ಪುರಹರಗೆ
ಸರಿಯಾದ ಕಾಣೆ ಸರ್ವಜ್ಞ

೯೬.
ಹರಿ ಬೊಮ್ಮನೆಂಬವರು, ಹರನಿಂದಲಾದವರು
ಅರಸಿಗೆ ಆಳು ಸರಿಯಹನೆ ಶಿವನಿಂದ
ಮೆರೆವರಿನ್ನಾರು ಸರ್ವಜ್ಞ

೯೭.
ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ
ನೆರೆಹತ್ತು ಜನನವಾಹರಿಗೆ ಇವರುಗಳು
ಸರಿಯಹರೆ ಸರ್ವಜ್ಞ

೯೮.
ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ
ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ
ಸರಿಯಾರು ಹೇಳಿ ಸರ್ವಜ್ಞ

೯೯.
ಇಂದ್ರನಾನೆಯನೇರಿ ಒಂದನೂ ಕೊಡಲರಿಯ
ಚ್ಂದ್ರಶೇಖರನು ಮುದಿಯೆತ್ತನೇರಿ
ಬೇಕೆಂದುದನು ಕೊಡುವ ಸರ್ವಜ್ಞ

೧೦೦.
ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ
ಶಂಭುವಿದ್ದಂತೆ ಮತ್ತೊಂದು ದೈವವನು
ನಂಬುವನೆ ಹೆಡ್ಡ ಸರ್ವಜ್ಞ



೧೦೧.
ಎಲುವಿನ ಕಾಯಕ್ಕೆ | ಸಲೆ ಚರ್ಮವನು ಹೊದಿಸಿ
ಮಲ-ಮೂತ್ರ-ಕ್ರಿಮಿಯು ಒಳಗಿರ್ಪ - ದೇಹಕ್ಕೆ
ಕುಲವಾವುದಯ್ಯ ಸರ್ವಜ್ಞ

೧೦೨.
ಹೊಲಸು ಮಾಂಸದ ಹುತ್ತು | ಎಲುವಿನ ಹಂಜರವು
ಹೊಲೆ ಬಲಿದ ತನುವಿನೊಳಗಿರ್ದು - ಮತ್ತದರ
ಕುಲವನೆಣಿಸುವರೆ ಸರ್ವಜ್ಞ

೧೦೩.
ದಿಟವೆ ಪುಣ್ಯದ ಪುಂಜ | ಸಟೆಯೆ ಪಾಪದ ಬೀಜ
ಕುಟಿಲ ವಂಚನೆಯ ಪೊಗದಿರು - ನಿಜವ ಪಿಡಿ
ಘಟವ ನೆಚ್ಚದಿರು ಸರ್ವಜ್ಞ

೧೦೪.
ಸುರತರು ಮರನಲ್ಲ | ಸುರಭಿಯೊಂದಾವಲ್ಲ
ಪರುಷ ಪಾಷಾಣದೊಳಗಲ್ಲ - ಗುರುವು ತಾ
ನರರೊಳಗಲ್ಲ ಸರ್ವಜ್ಞ

೧೦೫.
ಜ್ಯೋತಿಯಿಂದವೆ ನೇತ್ರ | ರಾತ್ರಿಯಲಿ ಕಾಂಬಂತೆ
ಸೂತ್ರದಲಿ ಧಾತನರಿವಂತೆ - ಶಿವನ ಗುರು
ನಾಥನಿಂದರಿಗು ಸರ್ವಜ್ಞ

೧೦೬.
ಮಂಡೆ ಬೋಳಾದೊಡಂ | ದಂಡು ಕೋಲ್ವಿಡಿದೊಡಂ
ಹೆಂಡತಿಯ ಬಿಟ್ಟು ನಡೆದೊಡಂ - ಗುರುಮುಖವ
ಕಂಡಲ್ಲದಿಲ್ಲ ಸರ್ವಜ್ಞ

೧೦೭. ಬ್ರಹ್ಮವೆಂಬುದು ತಾನು | ಒಮ್ಮಾರು ನೀಳವೇ
ಒಮ್ಮೆ ಸದ್ಗುರುವಿನುಪದೇಶ - ವಾಲಿಸಲು
ಗಮ್ಮನೆ ಮುಕ್ತಿ ಸರ್ವಜ್ಞ

೧೦೮.
ಊರಿಂಗೆ ದಾರಿಯ | ನಾರು ತೋರಿದರೇನು
ಸಾರಾಯಮಪ್ಪ ಮತವನರುಹಿಸುವ ಗುರು
ಆರಾದೊಡೇನು ಸರ್ವಜ್ಞ

೧೦೯.
ತುಪ್ಪವಾದಾ ಬಳಿಕ | ಹೆಪ್ಪನೆರೆದವರುಂಟೆ
ನಿಃಪತ್ತಿಯಾದ ಗುರುವಿನುಪದೇಶದಿಂ
ತಪ್ಪದೇ ಮುಕ್ತಿ ಸರ್ವಜ್ಞ

೧೧೦.
ಪರುಷ ಲೋಹವ ಮುಟ್ಟಿ | ವರುಷವಿರಬಲ್ಲುದೇ
ಪರುಷವೆಂತಂತೆ ಶಿಷ್ಯಂಗೆ - ಗುರುವಿನ
ಸ್ಪರುಶನವೆ ಮೋಕ್ಷ ಸರ್ವಜ್ಞ

೧೧೧.
ಮೊಸರ ಕಡೆಯಲು ಬೆಣ್ಣೆ | ಒಸೆದು ತೋರುವ ತೆರದಿ
ಹಸನುಳ್ಳ ಗುರುವಿನುಪದೇಶ - ದಿಂ ಮುಕ್ತಿ
ವಶವಾಗದಿಹುದೆ ಸರ್ವಜ್ಞ

೧೧೨.
ಗುರುಪಾದ ಸೇವೆ ತಾ ದೊರಕೊಂಡಿತಾದೊಡೆ
ಹಿರಿದಪ್ಪ ಪಾಪ ಹರೆವುದು - ಕರ್ಪುರದ
ಗಿರಿಯ ಸುಟ್ಟಂತೆ ಸರ್ವಜ್ಞ

೧೧೩.
ಎತ್ತಾಗಿ ತೊತ್ತಾಗಿ | ಹಿತ್ತಿಲದ ಗಿಡವಾಗಿ
ಮತ್ತೆ ಪಾದದ ಕೆರವಾಗಿ - ಗುರುವಿನ
ಹತ್ತಿಲಿರು ಎಂದ ಸರ್ವಜ್ಞ

೧೧೪.
ಸಾಣೆಕಲ್ಲೊಳು ಗಂಧ | ಮಾಣದೆ ಎಸೆವಂತೆ
ಜಾಣ ಶ್ರೀಗುರುವಿನುಪದೇಶ - ದಿಂ ಮುಕ್ತಿ
ಕಾಣಿಸುತಿಹುದು ಸರ್ವಜ್ಞ

೧೧೫.
ಬೆಟ್ಟ ಕರ್ಪುರ ಉರಿದು | ಬೊಟ್ಟಿಡಲು ಬೂದಿಲ್ಲ
ನೆಟ್ಟನೆ ಗುರುವಿನರಿದನ - ಕರ್ಮವು
ಮುಟ್ಟಲಂಜುವವು ಸರ್ವಜ್ಞ

೧೧೬.
ವಿಷಯಕ್ಕೆ ಕುದಿಯದಿರು | ಅಶನಕ್ಕೆ ಹದೆಯದಿರು
ಅಸಮಾಕ್ಷನಡಿಯನಗಲದಿರು - ಗುರುಕರುಣ
ವಶವರ್ತಿಯಹುದು ಸರ್ವಜ್ಞ

೧೧೭.
ತಂದೆಗೆ ಗುರುವಿಗೆ | ಒಂದು ಅಂತರವುಂಟು
ತಂದೆ ತೋರುವನು ಶ್ರೀಗುರುವ - ಗುರುರಾಯ
ಬಂಧನವ ಕಳೆವ ಸರ್ವಜ್ಞ

೧೧೮.
ಹಸಿಯ ಸೌದೆಯ ತಂದು | ಹೊಸೆದರುಂಟೇ ಕಿಚ್ಚು
ವಿಷಯಂಗಳುಳ್ಳ ಮನುಜರಿಗೆ - ಗುರುಕರುಣ
ವಶವರ್ತಿಯಹುದೆ ಸರ್ವಜ್ಞ

೧೧೯.
ಒಂದೂರ ಗುರುವಿರ್ದು | ವಂದನೆಯ ಮಾಡದೆ
ಸಂಧಿಸಿ ಕೂಳ ತಿನುತಿರ್ಪವನ - ಇರವು
ಹಂದಿಯ ಇರವು ಸರ್ವಜ್ಞ

೧೨೦.
ಲಿಂಗದ ಗುಡಿಯೆಲ್ಲಿ ? ಲಿಂಗಿಲ್ಲದೆಡೆಯೆಲ್ಲಿ ?
ಲಿಂಗದೆ ಜಗವು ಅಡಗಿಹುದು - ಲಿಂಗವನು
ಹಿಂಗಿ ಪರ ಉಂಟೆ ಸರ್ವಜ್ಞ

೧೨೧.
ಓರ್ವನಲ್ಲದೆ ಮತ್ತೆ | ಈರ್ವರುಂಟೇ ಮರುಳೆ
ಸರ್ವಜ್ಞನೋರ್ವ ಜಗಕೆಲ್ಲ - ಕರ್ತಾರ
ನೋರ್ವನೇ ದೇವ ಸರ್ವಜ್ಞ

೧೨೨.
ಎಂಜಲು ಶೌಚವು | ಸಂಜೆಯೆಂದೆನ ಬೇಡ
ಕುಂಜರ ವನವ ನೆನೆವಂತೆ - ಬಿಡದೆ ನಿ
ರಂಜನನ ನೆನೆಯ ಸರ್ವಜ್ಞ

೧೨೩.
ಭೂತೇಶ ಶರಣೆಂಬ | ಜಾತಿ ಮಾದಿಗನಲ್ಲ
ಜಾತಿಯಲಿ ಹುಟ್ಟಿ ಭೂತೇಶ - ಶರಣೆನ್ನ
ದಾತ ಮಾದಿಗನು ಸರ್ವಜ್ಞ

೧೨೪.
ಯಾತರ ಹೂವಾದರು | ನಾತರೆ ಸಾಲದೆ
ಜಾತಿ-ವಿಜಾತಿ ಯೆನಬೇಡ - ಶಿವನೊಲಿ
ದಾತನೇ ಜಾತಿ ಸರ್ವಜ್ಞ

೧೨೫.
ಮಾಯಾಮೋಹವ ನೆಚ್ಚಿ | ಕಾಯವನು ಕರಗಿಸುತೆ
ಆಯಾಸಗೊಳುತ ಇರಬೇಡ - ಓಂ ನಮಶ್ಯಿ
ವಾಯವೆಂದೆನ್ನಿ ಸರ್ವಜ್ಞ

೧೨೬.
ಮುನಿವಂಗೆ ಮುನಿಯದಿರು | ಕನೆವಂಗೆ ಕನೆಯದಿರು
ಮನಸಿಜಾರಿಯನು ಮರೆಯದಿರು - ಶಿವನ ಕೃಪೆ
ಘನಕೆ ಘನವಕ್ಕು ಸರ್ವಜ್ಞ

೧೨೭.
ನರರ ಬೇಡುವ ದೈವ | ವರವೀಯ ಬಲ್ಲುದೇ
ತಿರಿವವರನಡರಿ ತಿರಿವಂತೆ - ಅದನರಿ
ಹರನನೆ ಬೇಡು ಸರ್ವಜ್ಞ

೧೨೮.
ಲಿಂಗವ ಪೂಜಿಸುವಾತ | ಜಂಗಮಕೆ ನೀಡದೊಡೆ
ಲಿಂಗದ ಕ್ಷೋಭೆ ಘನವಕ್ಕು - ಮಹಲಿಂಗ
ಹಿಂಗುವುದು ಅವನ ಸರ್ವಜ್ಞ

೧೨೯.
ಉಣ ಬಂದ ಲಿಂಗಕ್ಕೆ | ಉಣಲಿಕ್ಕದಂತಿರಿಸಿ
ಉಣದಿರ್ಪ ಲಿಂಗಕ್ಕುಣ ಬಡಿಸಿ - ಕೈ ಮುಗಿವ
ಬಣಗುಗಳ ನೋಡ ಸರ್ವಜ್ಞ

೧೩೦.
ಒಮ್ಮನದಲ್ಲಿ ಶಿವಪೂಜೆಯ | ಗಮ್ಮನೆ ಮಾಡುವುದು
ಇಮ್ಮನವಿಡಿದು ಕೆಡಬೇಡ - ವಿಧಿವಶವು
ಸುಮ್ಮನೆ ಕೆಡಗು ಸರ್ವಜ್ಞ

೧೩೧.
ಅಂಗವನು ಲಿಂಗವನು | ಸಂಗೊಳಿಸಲೆಂತಕ್ಕು ?
ಲಿಂಗದೆ ನೆನಹು ಘನವಾಗೆ - ಆ ಅಂಗ
ಲಿಂಗವಾಗಿಕ್ಕು ಸರ್ವಜ್ಞ

೧೩೨. ಕಂಗಳಿಚ್ಛೆಗೆ ಪರಿದು | ಭಂಗಗೊಳದಿರು ಮನುಜ
ಲಿಂಗದಲಿ ಮನವ ನಿಲ್ಲಿಸಿ - ಸತ್ಯದಿ ನಿಲೆ
ಲಿಂಗವೇಯಹೆಯೊ ಸರ್ವಜ್ಞ

೧೩೩.
ಓದುವಾದಗಳೇಕೆ | ಗಾದೆಯ ಮಾತೇಕೆ
ವೇದ-ಪುರಾಣ ನಿನಗೇಕೆ - ಲಿಂಗದ
ಹಾದಿಯನರಿದವಗೆ ಸರ್ವಜ್ಞ

೧೩೪.
ನೋಟ ಶಿವಲಿಂಗದಲಿ | ಕೂಟ ಜಂಗಮದಲ್ಲಿ
ನಾಟಿ ತನು ಗುರುವಿನಲಿ ಕೂಡೆ - ಭಕ್ತನ ಸ
ಘಾಟವದು ನೋಡ ಸರ್ವಜ್ಞ

೧೩೫.
ನಾನು-ನೀನುಗಳಳಿದು | ತಾನೆ ಲಿಂಗದಿ ನಿಂದು
ನಾನಾ ಭ್ರಮೆಗಳ ನೆರೆ ಹಿಂಗಿ - ನಿಂದವನು
ತಾನೈಕ್ಯ ನೋಡ ಸರ್ವಜ್ಞ

೧೩೬.
ತನ್ನ ನೋಡಲಿಯೆಂದು | ಕನ್ನಡಿ ಕರೆವುದೇ
ತನ್ನಲ್ಲಿ ಜ್ಞಾನ ಉದಿಸಿದ - ಮಹತುಮನು
ಕನ್ನಡಿಯಂತೆ ಸರ್ವಜ್ಞ

೧೩೭.
ಹೆಣ್ಣನು ಹೊನ್ನನು | ಹಣ್ಣಾದ ಮರವನು
ಕಣ್ಣಲಿ ಕಂಡು - ಮನದಲಿ ಬಯಸದ
ಅಣ್ಣಗಳಾರು ಸರ್ವಜ್ಞ

೧೩೮.
ತಿರಿದು ತಂದಾದೊಡಂ | ಕರೆದು ಜಂಗಮಕಿಕ್ಕು
ಪರಿಣಾಮವಕ್ಕು ಪದವಕ್ಕು - ಕೈಲಾಸ
ನೆರೆಮನೆಯಕ್ಕು ಸರ್ವಜ್ಞ

೧೩೯.
ಆಡದೆಲೆ ಕೊಡುವವನು | ರೂಢಿಯೊಳಗುತ್ತಮನು
ಆಡಿ ಕೊಡುವವನು ಮಧ್ಯಮನು - ಅಧಮ
ತಾನಾಡಿಯೂ ಕೊಡದವನು ಸರ್ವಜ್ಞ

೧೪೦.
ಮಾನವನ ದುರ್ಗುಣವ | ನೇನೆಂದು ಬಣ್ಣಿಸುವೆ
ದಾನಗೈಯಲು ಕನಲುವ - ದಂಡವನು
ಮೋನದಿಂ ತೆರುವ ಸರ್ವಜ್ಞ

೧೪೧.
ಅಂತಕ್ಕು ಇಂತಕ್ಕು | ಎಂತಕ್ಕು ಎನಬೇಡ
ಚಿಂತಿಸಿ ಸುಯ್ವುತಿರಬೇಡ ಶಿವನಿರಿಸಿ
ದಂತಿಹುದೆ ಲೇಸು ಸರ್ವಜ್ಞ

೧೪೨.
ಸಿರಿಯು ಸಂಸಾರವು | ಸ್ಥಿರವೆಂದು ನಂಬದಿರು
ಹಿರಿದೊಂದು ಸಂತೆ ನೆರೆದೊಂದು - ಜಾವಕ್ಕೆ
ಹರೆದು ಹೋಹಂತೆ ಸರ್ವಜ್ಞ

೧೪೩.
ದಂತಪಂಕ್ತಿಗಳೊಳಗೆ | ಎಂತಿಕ್ಕು ನಾಲಗೆಯು
ಸಂತತ ಖಳರ ಒಡನಿರ್ದು - ಬಾಳುವು
ದಂತೆ ಕಂಡಯ್ಯ ಸರ್ವಜ್ಞ

೧೪೪.
ಹಸಿಯದಿರೆ ಕಡುಗಾದ | ಬಿಸಿನೀರ ಕೊಂಬುದು
ಹಸಿವಕ್ಕು ಸಿಕ್ಕ ಮಲ ಬಿಡುಗು - ದೇಹ ತಾ
ಸಸಿನವಾಗುವುದು ಸರ್ವಜ್ಞ

೧೪೫.
ಹಸಿವಿಲ್ಲದುಣಬೇಡ | ಹಸಿದು ಮತ್ತಿರಬೇಡ
ಬಿಸಿ ಬೇಡ ತಂಗುಳವು ಬೇಡ - ವೈದ್ಯನ
ಗಸಣಿಸಿಯೇ ಬೇಡ ಸರ್ವಜ್ಞ
೧೪೬.
ಜಾತಿ ಹೀನನ ಮನೆಯ | ಜ್ಯೋತಿ ತಾ ಹೀನವೇ
ಜಾತಿ-ವಿಜಾತಿಯೆನಬೇಡ - ದೇವನೊಲಿ
ದಾತನೇ ಜಾತ ಸರ್ವಜ್ಞ

೧೪೭.
ಕ್ಷಣಮಾತ್ರವಾದರೂ | ಗುಣಿಗಳೊಡನಾಡುವುದು
ಗುಣಹೀನರುಗಳ ಒಡನಾಟ - ಬಹುದುಃಖ
ದಣಲೊಳಿರ್ದಂತೆ ಸರ್ವಜ್ಞ

೧೪೮.
ಬಸವ ಗುರುವಿನ ಹೆಸರ | ಬಲ್ಲವರಾರಿಲ್ಲ
ಪುಸಿಮಾತನಾಡಿ ಕೆಡದಿರಿ - ಲೋಕಕ್ಕೆ
ಬಸವನೇ ಕರ್ತ ಸರ್ವಜ್ಞ

೧೪೯.
ಹಸಿದೊಡಂಬಲಿ ಮುದ್ದು | ಬಿಸಿಲಿಗೆ ಕೊಡೆ ಮುದ್ದು
ಬಸುರಲ್ಲಿ ಬಂದ ಶಿಶು ಮುದ್ದು - ಲೋಕಕ್ಕೆ
ಬಸವಣ್ಣನೇ ಮುದ್ದು ಸರ್ವಜ್ಞ

೧೫೦.
ಕತ್ತೆ ಬೂದಿಯ ಹೊರಳಿ | ಭಕ್ತನಂತಾಗುವುದೆ
ತತ್ವವರಿಯದಲೆ ಭಸಿತವಿಟ್ಟರೆ ಶುದ್ಧ
ಕತ್ತೆಯಂತಕ್ಕು ಸರ್ವಜ್ಞ

೧೫೧.
ಬಲ್ಲವರ ಒಡನಾಡೆ | ಬೆಲ್ಲವನು ಸವಿದಂತೆ
ಅಲ್ಲದಜ್ಞಾನಿಯೊಡನಾಡೆ - ಮೊಳಕೈಗೆ
ಕಲ್ಲು ಹೊಡೆದಂತೆ ಸರ್ವಜ್ಞ

೧೫೨.
ಬಂದುದನೆ ತಾ ಹಾಸಿ | ಬಂದುದನೆ ತಾ ಹೊದೆದು
ಬಂದುದನೆ ಮೆಟ್ಟಿ ನಿಂತರೆ - ವಿಧಿ ಬಂದು
ಮುಂದೇನ ಮಾಳ್ಕು ಸರ್ವಜ್ಞ

೧೫೩.
ಸಿರಿ ಬಂದ ಕಾಲದಲಿ | ಕರೆದು ದಾನವ ಮಾಡು
ಪರಿಣಾಮವಕ್ಕು ಪದವಕ್ಕು - ಕೈಲಾಸ
ನೆರೆಮನೆಯಕ್ಕು ಸರ್ವಜ್ಞ

೧೫೪.
ಏನ ಬೇಡುವಡೊಬ್ಬ | ದಾನಿಯನೆ ಬೇಡುವುದು
ದೀನನ ಬೇಡಿ ಬಳಲಿದಡೆ - ಆ ದೀನ
ನೇನ ಕೊಟ್ಟಾನು ಸರ್ವಜ್ಞ

೧೫೫.
ಕೋಡಿಯನು ಕಟ್ಟಿದರೆ | ಕೇಡಿಲ್ಲವಾ ಕೆರೆಗೆ
ಮಾಡು ಧರ್ಮಗಳ ಮನಮುಟ್ಟಿ - ಕಾಲನಿಗೆ
ಈಡಾಗದ ಮುನ್ನ ಸರ್ವಜ್ಞ

೧೫೬.
ಅನ್ನದಾನಗಳಿಗಿಂತ | ಇನ್ನು ದಾನಗಳಿಲ್ಲ
ಅನ್ನಕ್ಕೆ ಮೇಲು ಹಿರಿದಿಲ್ಲ - ಲೋಕಕ್ಕೆ
ಅನ್ನವೇ ಪ್ರಾಣ ಸರ್ವಜ್ಞ

೧೫೭.
ಉಣ್ಣದೊಡವೆಯ ಗಳಿಸಿ | ಮಣ್ಣಾಗೆ ಬಚ್ಚಿಟ್ಟು
ಚೆನ್ನಾಗಿ ಬಳಿದು ಮೆತ್ತಿದನ - ಬಾಯೊಳಗೆ
ಮಣ್ಣು ಕಂಡಯ್ಯ ಸರ್ವಜ್ಞ

೧೫೮.
ಕೊಟ್ಟಿರ್ದ ಕಾಲದಲಿ | ಅಟ್ಟುಣ್ಣಲರಿಯದೆ
ಹುಟ್ಟಿಕ್ಕಿ ಜೇನು ಅನುಮಾಡಿ - ಪರರಿಗೆ
ಕೊಟ್ಟು ಹೋದಂತೆ ಸರ್ವಜ್ಞ

೧೫೯.
ಹೆಣ್ಣಿಂದ ಇಹವುಂಟು | ಹೆಣ್ಣಿಂದ ಪರವುಂಟು
ಹೆಣ್ಣಿಂದ ಸಕಲ ಫಲವುಂಟು - ಮರೆದರೆ
ಹೆಣ್ಣಿಂದ ಮರಣ ಸರ್ವಜ್ಞ

೧೬೦.
ಮಜ್ಜಿಗೂಟಕೆ ಲೇಸು | ಮಜ್ಜನಕೆ ಮಡಿ ಲೇಸು
ಕಜ್ಜಾಯ ತುಪ್ಪ ಉಣ ಲೇಸು - ಮನೆಗೊಬ್ಬ
ಅಜ್ಜಿಯೇ ಲೇಸು ಸರ್ವಜ್ಞ

೧೬೧.
ಸಿರಿ ಬಲ ಉಳ್ಳಾಗ | ಮರೆಯದವನೇ ಜಾಣ
ಕೊರತೆಯಾದಾಗ ಕೊಡುವೆನಿದ್ದರೆ ಎಂದು
ಅರಚುವವನೆ ಹೆಡ್ಡ ಸರ್ವಜ್ಞ

೧೬೨.
ನಿತ್ಯ ನೀರೊಳು ಮುಳುಗಿ | ಹತ್ಯಾನೆ ಸ್ವರ್ಗಕ್ಕೆ
ಹತ್ತೆಂಟು ಕಾಲ ಜಲದೊಳಗಿಹ ಕಪ್ಪೆ
ಹತ್ತವ್ಯಾಕಯ್ಯ ಸರ್ವಜ್ಞ

೧೬೩.
ಅನ್ನ ದೇವರ ಮುಂದೆ | ಇನ್ನು ದೇವರು ಉಂಟೆ
ಅನ್ನವಿರುವನಕ ಪ್ರಾಣವು - ಜಗದೊಳ
ಗನ್ನವೇ ದೈವ ಸರ್ವಜ್ಞ

೧೬೪.
ನಂಬು ಪರಶಿವನೆಂದು | ನಂಬು ಗುರುಚರಣವನು
ನಂಬಲಗಸ್ತ್ಯ ಕುಡಿದನು - ಶರಧಿಯನು
ನಂಬು ಗುರುಪದವ ಸರ್ವಜ್ಞ

೧೬೫.
ಬಂಧುಗಳಾದವರು ಮಿಂದುಂಡು ಹೋಹರು
ಬಂಧನವ ಕಳೆಯಲರಿಯರು - ಗುರುವಿಂದ
ಬಂಧನವಳಿಗು ಸರ್ವಜ್ಞ

೧೬೬.
ಮೆಟ್ಟಿಪ್ಪುದಾಶೆಯನು | ಕಟ್ಟಿಪ್ಪುದಿಂದ್ರಿಯವ
ತೊಟ್ಟಿಪ್ಪುದುಳ್ಳ ಸಮತೆಯನು - ಶಿವಪದವ
ಮುಟ್ಟಿಪ್ಪುದಯ್ಯ ಸರ್ವಜ್ಞ

೧೬೭.
ಚಿತ್ತೆಯ ಮಳೆ ಹೊಯ್ದು | ಮುತ್ತಾಗಬಲ್ಲುದೆ
ಚಿತ್ತದ ನೆಲೆಯನರಿಯದೆ - ಬೋಳಾದ
ರೆತ್ತಣ ಯೋಗ ಸರ್ವಜ್ಞ

೧೬೮.
ಇಂದ್ರಿಯವ ತೊರೆದಾತ | ವಂದ್ಯನು ಜಗಕೆಲ್ಲ
ಬಿಂದುವಿನ ಬೇಧವರಿದ ಮಹಾತ್ಮನು
ಬೆಂದ ನುಲಿಯಂತೆ ಸರ್ವಜ್ಞ

೧೬೯.
ಜ್ಞಾನಿ ಸಂಸಾರದೊಳು | ತಾನಿರಬಲ್ಲನು
ಭಾನು ಮಂಡಲದಿ ಹೊಳೆವಂತೆ - ನಿರ್ಲೇಪ
ಏನಾದಡೇನು ಸರ್ವಜ್ಞ

೧೭೦.
ಸತ್ಯವ ನುಡಿವಾತ | ಸತ್ತವನೆನಬೇಡ
ಹೆತ್ತ ತಾಯ್ ಮಗನ ಕರೆವಂತೆ - ಸ್ವರ್ಗದವ
ರಿತ್ತ ಬಾಯೆಂಬ ಸರ್ವಜ್ಞ

೧೭೧.
ಜ್ಞಾನಿಯನಜ್ಞಾನಿಯೆಂದು | ಹೀನ ತಾ ನುಡಿದರೆ
ಆನೆಯನೇರಿ ಸುಖದಿಂದಲಿ - ಹೋಹಂಗೆ
ಶ್ವಾನ ಬೊಗಳ್ದೇನು ಸರ್ವಜ್ಞ

೧೭೨.
ತುಂಬಿದಾ ಕೆರೆಭಾವಿ | ತುಂಬಿಹುದೆನಬೇಡ
ನಂಬಿರಬೇಡ ಲಕ್ಶ್ಮಿಯನು - ಬಡತನವು
ಬೆಂಬಳಿಯೊಳಿಹುದು ಸರ್ವಜ್ಞ

೧೭೩.
ಕೇಡನೊಬ್ಬನಿಗೆ ಬಯಸೆ | ಕೇಡು ತಪ್ಪದು ತನಗೆ
ಕೂಡಿ ಕೆಂಡವನು ತೆಗೆದೊಡೆ - ತನ್ನ ಕೈ
ಕೂಡೆ ಬೇವಂತೆ ಸರ್ವಜ್ಞ

೧೭೪.
ಅರಸು ಮುನಿದೂರೊಳಗೆ | ಇರುವುದೇ ಕರ ಕಷ್ಟ
ಅರಸು ಮನ್ನಣೆಯು ಕರಗಿದ - ಠಾವಿಂದ
ಸರಿವುದೇ ಲೇಸು ಸರ್ವಜ್ಞ

೧೭೫.
ಆಶೆಯುಳ್ಳನ್ನಕ್ಕರ - ದಾಸನಾಗಿರುತಿಪ್ಪ
ಆಶೆಯ ತಲೆಯನಳಿದರೆ - ಕೈಲಾಸ
ದಾಚೆಯಲಿಪ್ಪ ಸರ್ವಜ್ಞ

೧೭೬.
ಧಾರುಣಿ ನಡುಗುವುದು | ಮೇರುವಲ್ಲಾಡುವುದು
ವಾರಿಧಿ ಬತ್ತಿ ಬರೆವುದು - ಶಿವಭಕ್ತಿ
ಯೋರೆಯಾದಂದು ಸರ್ವಜ್ಞ

೧೭೭.
ಮಂದಿಯಿಲ್ಲದರಸು | ತಂದೆ ಇಲ್ಲದ ಕಂದ
ಬಂಧುಗಳಿಲ್ಲದಿಹ ಬಡತನ - ಇವು ತಾನು
ಎಂದಿಗೂ ಬೇಡ ಸರ್ವಜ್ಞ

೧೭೮.
ಅನ್ನವಿಕ್ಕದನಿಂದ | ಕುನ್ನಿ ತಾ ಕರ ಲೇಸು
ಉನ್ನತವಪ್ಪತಿಥಿಗಿಕ್ಕದ ಬದುಕು - ನಾಯ
ಕುನ್ನಿಯಿಂ ಕಷ್ಟ ಸರ್ವಜ್ಞ

೧೭೯.
ಉರಿಯುದಕ ಶೀತವು | ಉರಗಪತಿ ಭೀಕರವು
ಗುರುವಾಜ್ಞೆಗಂಜಿ ಕೆಡುವವು - ಇದ ನರ
ರರಿಯದೆ ಕೆಡುಗು ಸರ್ವಜ್ಞ

೧೮೦.
ಶೇಷನಿಂ ಹಿರಿದಿಲ್ಲ | ಆಸೆಯಿಂ ಕೀಳಿಲ್ಲ
ರೋಷದಿಂದಧಮಗತಿಯಿಲ್ಲ - ಪರದೈವ
ಈಶನಿಂದಿಲ್ಲ ಸರ್ವಜ್ಞ

೧೮೧.
ಕೊಟ್ಟು ಹುಟ್ಟಲಿಲ್ಲ | ಮುಟ್ಟಿ ಪೂಜಿಸಲಿಲ್ಲ
ಸಿಟ್ಟಿನಲಿ ಶಿವನ ಬೈದರೆ - ಶಿವ ತಾನು
ರೊಟ್ಟಿ ಕೊಡುವನೆ ಸರ್ವಜ್ಞ

೧೮೨.
ಹಸಿವರಿತು ಉಂಬುದು | ಬಿಸಿನೀರ ಕುಡಿವುದು
ಹಸಿವಕ್ಕು ವಿಷಯ ಘನವಕ್ಕು - ವೈದ್ಯಗೆ
ಬೆಸಸ ಬೇಡೆಂದ ಸರ್ವಜ್ಞ

೧೮೩.
ಲಿಂಗಕೆ ತೋರಿಸುತ | ನುಂಗುವಾತನೆ ಕೇಳು
ಲಿಂಗ ಉಂಬುವುದೆ ? ಪೊಡಮಡು - ತೆಲೊ ಪಾಪಿ
ಜಂಗಮಕೆ ನೀಡು ಸರ್ವಜ್ಞ

೧೮೪.
ಹೆಂಡಿರು ಮಕ್ಕಳಿಗೆಂದು | ದಂಡಿಸದಿರು ದೇಹವನು
ಭಂಡ ವಸ್ತುವನು ಕೊಡದುಣದೆ - ಬೈಚಿಡಲು
ಕಂಡವರಿಗಹುದು ಸರ್ವಜ್ಞ

೧೮೫.
ಮಾತು ಬಂದಲ್ಲಿ ತಾ | ಸೋತು ಬರುವುದು ಲೇಸು
ಮಾತಿಂಗೆ ಮಾತು ಮಥಿಸೆ - ವಿಧಿ ಬಂದು
ಆತುಕೊಂಡಿಹುದು ಸರ್ವಜ್ಞ

೧೮೬.
ಕಣ್ಣು ನಾಲಗೆ ಮನವು | ತನ್ನವೆಂದೆನ ಬೇಡ
ಅನ್ಯರು ಕೊಂದರೆನ ಬೇಡ - ಇವು ಮೂರು
ತನ್ನನೇ ಕೊಲುಗು ಸರ್ವಜ್ಞ

೧೮೭.
ನುಡಿಸುವುದಸತ್ಯವನು | ಕೆಡಿಸುವುದು ಧರ್ಮವನು
ಒಡಲನೆ ಕಟ್ಟಿ ಹಿಡಿಸುವುದು - ಲೋಭದ
ಗಡಣ ಕಾಣಯ್ಯ ಸರ್ವಜ್ಞ

೧೮೮.
ಸೊಡರಿಂಗೆ ಎಣ್ಣೆಯ | ಕೊಡನೆತ್ತಿ ಹೊಯಿವರೆ
ಬಡವನೆಂದು ಕೊಡದೆ ಇರಬೇಡ - ಇರವರಿದು
ಕೊಡುವುದೇ ಲೇಸು ಸರ್ವಜ್ಞ

೧೮೯.
ಒಡಲೆಂಬ ಹುತ್ತಕ್ಕೆ | ನುಡಿವ ನಾಲಗೆ ಸರ್ಪ
ಕಡುರೋಷವೆಂಬ ವಿಷವೇರೆ - ಸಮತೆ ಗಾ
ರುಡಿಗನಂತಕ್ಕು ಸರ್ವಜ್ಞ

೧೯೦.
ಅಪಮಾನದೂಟದಿಂ | ದುಪವಾಸ ಕರ ಲೇಸು
ನೃಪನೆದ್ದು ಬಡಿವ ಅರಸನೋಲಗದಿಂದ
ತಪವಿಹುದೆ ಲೇಸು ಸರ್ವಜ್ಞ

೧೯೧.
ಹಿರಿದು ಪಾಪವ ಮಾಡಿ - ಹರಿವರು ಗಂಗೆಗೆ
ಹರಿವ ನೀರಲ್ಲಿ ಕರಗುವೊಡೆ - ಯಾ ಪಾಪ
ಎರೆಯ ಮಣ್ಣಲ್ಲ ಸರ್ವಜ್ಞ

೧೯೨.
ಅಂತಿರ್ದರಿಂತಿರ್ದ | ರೆಂತಿರ್ದರೆನಬೇಡ
ಕುಂತಿಯಣುಗರು ತಿರಿದರು - ಮಿಕ್ಕವರು
ಎಂತಿರ್ದರೇನು ಸರ್ವಜ್ಞ

೧೯೩.
ಉಳ್ಳಲ್ಲಿ ಉಣಲೊಲ್ಲ | ಉಳ್ಳಲ್ಲಿ ಉಡಲೊಲ್ಲ
ಉಳ್ಳಲ್ಲಿ ದಾನಗೊಡಲೊಲ್ಲ - ನವನೊಡವೆ
ಕಳ್ಳಗೆ ನೃಪಗೆ ಸರ್ವಜ್ಞ

೧೯೪.
ಕೊಡುವಾತನೇ ಮೃಢನು | ಪಡೆವಾತನೇ ನರನು
ಒಡಲು-ಒಡವೆಗಳು ಕೆಡೆದು ಹೋಗದ ಮುನ್ನ
ಕೊಡು ಪಾತ್ರವನರಿದು ಸರ್ವಜ್ಞ

೧೯೫.
ಅನ್ನವನಿಕ್ಕುವುದು | ನನ್ನಿಯನು ನುಡಿವುದು
ತನ್ನಂತೆ ಪರರ ಬಗೆದೊಡೆ - ಕೈಲಾಸ
ಬಿನ್ನಾಣವಕ್ಕು ಸರ್ವಜ್ಞ

೧೯೬.
ಆನೆ ಮುಕುರದೊಳಡಗಿ | ಭಾನು ಸರಸಿಯೊಳಡಗಿ
ನಾನೆನ್ನ ಗುರುವಿನೊಳಡಗಿ - ಸಂಸಾರ
ತಾನದೆತ್ತಣದು ಸರ್ವಜ್ಞ

೧೯೭.
ಎಂಜಲು ಹೊಲೆಯಿಲ್ಲ | ಸಂಜೆಗತ್ತಲೆಯಿಲ್ಲ
ಅಂಜಿಕೆಯಿಲ್ಲ ಭಯವಿಲ್ಲ - ಜ್ಞಾನವೆಂ
ಬಂಜನವಿರಲು ಸರ್ವಜ್ಞ

೧೯೮.
ಬಲ್ಲೆನೆಂಬಾ ಮಾತು | ಎಲ್ಲವೂ ಹುಸಿ ನೋಡಾ
ಬಲ್ಲರೆ ಬಲ್ಲೆನೆನಬೇಡ - ಸುಮ್ಮನಿರ
ಬಲ್ಲರೆ ಬಲ್ಲ ಸರ್ವಜ್ಞ

೧೯೯.
ಏನಾದಡೇನಯ್ಯ | ತಾನಾಗದನ್ನಕ್ಕ
ತಾನಾಗಿ ತನ್ನನರಿದಡೆ - ಲೋಕ ತಾ
ನೇನಾದಡೇನು ಸರ್ವಜ್ಞ

೨೦೦.
ಆನೆ ನೀರಾಟದಲಿ | ಮೀನ ಕಂಡಂಜುವುದೇ
ಹೀನಮಾನವರ ಬಿರುನುಡಿಗೆ - ತತ್ವದ
ಜ್ಞಾನಿ ಅಂಜುವನೆ ಸರ್ವಜ್ಞ

ಅಲ್ಲಮಪ್ರಭುವಿನ ವಚನಗಳು

೧.
ಶಿಲೆಯೊಳಗಣ ಪಾವಕನಂತೆ
ಉದಕದೊಳಗಣ ಪ್ರತಿಬಿಂಬದಂತೆ
ಬೀಜದೊಳಗಣ ವೃಕ್ಷದಂತೆ
ಶಬ್ದದೊಳಗಣ ನಿಶ್ಯಬ್ದದಂತೆ
ಗುಹೇಶ್ವರ, ನಿಮ್ಮ ಶರಣಸಂಬಂಧ.

೨.
ಜಲದೊಳಗಿದ್ದ ಕಿಚ್ಚು
ಜಲವ ಸುಡದೆ, ಜಲವು ತಾನಾಗಿದ್ದಿತು ನೋಡಾ!
ನೆಲೆಯನಱದು ನೋಡಿಹೆನೆಂದಡೆ
ಅದು ಜಲವು ತಾನಲ್ಲ !
ಕುಲದೊಳಗಿದ್ದು, ಕುಲವ ಬೆರಸದೆ,
ನೆಲೆಗೆಟ್ಟುನಿಂದುದನಾರುಬಲ್ಲರು !
ಹೊಱಗೊಳಗೆ ತಾನಾಗಿದ್ದು ಮತ್ತೆ
ತಲೆದೋಱದಿಪ್ಪುದು, ಗುಹೇಶ್ವರ, ನಿಮ್ಮ ನಿಲುವು ನೋಡಾ !

ಪಿಂಡಜ್ಞಾನ ಸ್ಥಲ

೩.
ಆದಿಯಾಧಾರವಿಲ್ಲದಂದು
ಹಮ್ಮು ಬಿಮ್ಮುಗಳಿಲ್ಲದಂದು
ಸುರಾಳನಿರಾಳವಿಲ್ಲದಂದು
ಸಚರಾಚರವೆಲ್ಲ ರಚನೆಗೆ ಬಾರದಂದು
ಗುಹೇಶ್ವರ, ನಿಮ್ಮ ಶರಣನುದಯಿಸಿದನಂದು

೪.
ಅಯ್ಯ,
ಜಲ-ಕೂರ್ಮ-ಗಜ-ಫಣಿಯ ಮೇಲೆ ಧರೆ ವಿಸ್ತರಿಸಿ ನಿಲ್ಲದಂದು,
ಗಗನವಿಲ್ಲದಂದು, ಪವನನ ಸುಳುಹಿಲ್ಲದಂದು,
ಅಗ್ನಿಗೆ ಕಳೆದೋಱದಂದು,
ಯುಗ-ಜುಗಮಿಗಿಲೆನಿಸಿದ ಹದಿನಾಲ್ಕು ಭುವನ ನೆಲೆಗೊಳ್ಳದಂದು,
ನಿಜವನಱಿದಿಹೆನೆಂಬ ತ್ರಿಜಗದಧಿಪತಿಗಳಿಲ್ಲದಂದು :
ತೋಱುವ ಬೀಱುವ ಪರಿಭಾವದಲ್ಲಿ ಭರಿತ
ಅಗಮ್ಯ ಗುಹೇಶ್ವರಲಿಂಗವು.

೫.
ಎನ್ನ ನಾನಱಿಯದ ಮುನ್ನ
ನೀನೇನಾಗಿದ್ದೆ ಹೇಳಾ ?
ಮುನ್ನ ನೀ ಬಾಯಿ ಮುಚ್ಚಿಕೊಂಡಿದ್ದೆಯೆಂಬುದ
ನಾ ನಿನ್ನ ಕಣ್ಣಿಂದ ಕಂಡೆನು !
ಎನ್ನ ನಾನಱಿದ ಬಳಿಕ
ಇನ್ನು ನೀ ಬಾಯ್ದೆಱೆದು ಮಾತನಾಡಿದರೆ
ಅದನೆನ್ನ ಕಣ್ಣಿಂದ ನೀ ಕಂಡು ನಾಚಿದೆ ನೋಡಾ !
ಎನ್ನ ಕಾಬ ನಿನಗೆ, ನಿನ್ನ ಕಾಬ ಎನಗೆ
ಸಂಚದ ನೋಟ ಒಂದೆ ನೋಡಾ !
ಗುಹೇಶ್ವರ, ನಿನ್ನ ಬೆಡಗಿನ ಬಿನಾಣವನಱಿದೆ ನೋಡಾ !

೬.
ಮಾಯದ ಬಲೆಯಲ್ಲಿ ಸಿಲುಕಿದ
ಮರುಳ ನಾನೆಂದಱಿದ ಪರಿಯ ನೋಡಾ !
ತನ್ನ ವಿನೋದಕ್ಕೆ ಬಂದು
ನಿಶ್ಚಿಂತ ನಿರಾಳ ಗುಹೇಶ್ವರನೆಂದಱಿಯದ ಪರಿಯ ನೋಡಾ !

ಮಾಯಾವಿಲಾಸ ವಿಡಂಬನ ಸ್ಥಲ

೭.
ಕಾಯದ ಮೊದಲಿಂಗೆ ಬೀಜವಾವುದೆಂದಱಿಯದೀ ಲೋಕ !
ಇಂದ್ರಿಯಂಗಳು ಬೀಜವಲ್ಲ !
ಆ ಕಳಾಭೇದ ಬೀಜವಲ್ಲ !
ಸ್ವಪ್ನ ಬಂದೆಱಗಿತ್ತಲ್ಲಾ !
ಇದಾವಂಗೂ ಶುದ್ಧ ಸುಯಿಧಾನವಲ್ಲ ಕಾಣಾ ಗುಹೇಶ್ವರ.

೮.
ಗಗನದ ಮೇಲೊಂದಭಿನವ ಗಿಳಿ ಹುಟ್ಟಿ
ಸಯಸಂಭ್ರಮದಲ್ಲಿ ಮನೆಯ ಮಾಡಿತ್ತು !
ಒಂದು ದಿನ ಗಿಳಿ ಇಪ್ಪತೈದು ಗಿಳಿಯಾಯಿತ್ತು !
ಬ್ರಹ್ಮನಾ ಗಿಳಿಗೆ ಹಂಜರವಾದ
ವಿಷ್ಣುವಾ ಗಿಳಿಗೆ ಕೊಱೆಕೂಳಾದ
ರುದ್ರನಾ ಗಿಳಿಗೆ ತಾ ಕೋಲಾದ !
ಇಂತೀ ಮೂವರ ಮುಂದಣ ಕಂದನ ನುಂಗಿ
ದೃಷ್ಟನಾಮ ನಷ್ಟವಾಯಿತ್ತು-ಇದೆಂತೋ ಗುಹೇಶ್ವರ ?!

೯.
ನೆಲದ ಬೊಂಬೆಯ ಮಾಡಿ
ಜಲವ ಬಣ್ಣವನುಡಿಸಿ
ಹಲವು ಪರಿಯಾಶ್ರಮದಲ್ಲಿ ಉಲಿವ ಗೆಜ್ಜೆಯ ಕಟ್ಟಿ
ವಾಯುವನಲಸಂಚಕ್ಕೆ ಅರಳೆಲೆಯ ಶೃಂಗಾರವ ಮಾಡಿ
ಆಡಿಸುವ ಯಂತ್ರವಾಹಕನಾರೋ ?
ಬಯಲ ಕಂಭಕ್ಕೆ ತಂದು
ಸಯವೆಂದು ಪರವ ಕಟ್ಟಿದೆಡೆ
ಸಯವದ್ವಯವಾಯಿತ್ತು-ಏನೆಂಬೆ ಗುಹೇಶ್ವರ.

೧೦.
ಜಂಬೂದ್ವೀಪದ ವ್ಯವಹಾರಿ
ಖಂಡಭಂಡವ ತುಂಬಿ
ಕುಂಭಿನಿಯುದರದ ಮೇಲೆ ಪಸರವನಿಕ್ಕಿದ.
ಉಷ್ಣ-ತೃಷ್ಣೆ ಘನವಾಗಿ
ಕಡಲೇಳು ಸಮುದ್ರವ ಕುಡಿದು
ನೀರಡಸಿ, ಅಱಲುಗೊಂಡು ಬೆಱಗಾದ !
ಶಿಶು ತಾಯ ಹೆಣನ ಹೊತ್ತುಕೊಂದು ಹೆಸರು ಹೇಳುತ್ತೈದಾನೆ
ಗುಹೇಶ್ವರನೆಂಬ ನಿಲವ ವಸುಧೆಯಾಕೃತಿ ನುಂಗಿತ್ತು.

೧೧.
ದೇವರೆಲ್ಲರ ಹೊಡೆತಂದು
ದೇವಿಯರೊಳಗೆ ಕೂಡಿತ್ತು-ಮಾಯೆ !
ಹರಹರಾ, ಮಾಯೆಯಿಯ್ದೆಡೆಯ ನೋಡಾ !
ಎರಡೆಂಬತ್ತು ಕೋಟಿ ಪ್ರಮಥಗಣಂಗಳು
ಅಂಗಾಲ ಕಣ್ಣವರು, ಮೈಯೆಲ್ಲ ಕಣ್ಣವರು
ನಂದಿವಾಹನ-ರುದ್ರರು
ಇವರೆಲ್ಲರೂ
ಮಾಯೆಯ ಕಾಲುಗಾಹಿನ ಸರಮಾಲೆ ಕಾಣ ಗುಹೇಸ್ವರ !

೧೨.
ಊರ ಮಧ್ಯದ ಕಣ್ಣ ಕಾಡಿನೊಳಗೆ
ಬಿದ್ದೈದಾವೆ ಐದು ಹೆಣನು.
ಅಂದು ಬಂದು ಅಳುವರು ಬಳಗ ಘನವಾದ ಕಾರಣ,
ಹೆಣನೂ ಬೇಯದು, ಕಾಡೂ ನಂದದು
ಮಾಡ ಉರಿಯಿತ್ತು ಗುಹೇಶ್ವರ !

೧೩.
ಹುಲಿಯ ಬೆನ್ನಲ್ಲಿ ಒಂದು ಹುಲ್ಲೆ ಹೋಗಿ
ಮೇದು ಬಂದೆನೆಂದರೆ-ಅದ ಕಂಡು ಬೆಱಗಾದೆ !
ರಕ್ಕಸಿಯ ಮನೆಗೆ ಹೋಗಿ
ನಿದ್ರೆಗೆಯ್ದು ಬಂದೆನೆಂದರೆ-ಅದ ಕಂಡು ಬೆಱಗಾದೆ !
ಜವನ ಮನೆಗೆ ಹೋಗಿ
ಸಾಯದೆ ಬದುಕಿ ಬಂದೆನೆಂದರೆ-ಅದ ಕಂಡು ಬೆಱಗಾದೆ !
ಗುಹೇಶ್ವರ.

೧೪.
ಹೃದಯಕಂದದ ಮೇಲೆ ಹುಟ್ಟಿತ್ತು
ಹರಿದು-ಹಬ್ಬಿ-ಕೊಬ್ಬಿ ಹಲವು ಫಲವಾಯಿತ್ತು ನೋಡಿರೇ
ಪರಿಪರಿಯ ಫಲಂಗಳನು-ಬೇಡಿದವರಿಗಿತ್ತು -
ಆ ಫಲವ ಬಯಸಿದವರು ಜಲದೊಳಗೆ ಬಿದ್ದರೆ
ನೋಡಿ ನಗುತ್ತಿದ್ದೆನ್ತು - ಗುಹೇಶ್ವರ.

೧೫.
ಅರಗಿನ ಪುತ್ಥಳಿಯನುರಿ ಕೊಂಡಡೆ
ಉದಕ ಬಾಯಾಱಿ ಬಳಲುತ್ತಿದೆ !
ಅಗೆಯಿಂ ಭೋ! ಭಾವಿಯನಗೆಯಿಂ ಭೋ !
ಅಗೆದಾತ ಸತ್ತ-ಭಾವಿ ಬತ್ತಿತ್ತು.
ಇದು ಕಾರಣ ನೆಱೆ ಮೂಱು ಲೋಕ
ಬಱುಸೂಱೆವೋಯಿತ್ತು-ಗುಹೇಶ್ವರ.

೧೬.
ಅಂಗದ ಕೊನೆಯ ಮೇಲಣ ಕೋಡಗ
ಕೊಂಬು-ಕೊಂಬಿಗೆ ಹಾರಿತ್ತು ಅಯ್ಯ.
ಒಂದು ಸೋಜಿಗ-
ಕೈಯ ನೀಡಲು ಮೈಯೆಲ್ಲವ ನುಂಗಿತ್ತು !
ಒಯ್ಯನೆ ಕರೆದಡೆ ಮುಂದೆ ನಿಂದಿತ್ತು !
ಮು(ಮೆ)ಯ್ಯಾಂತಡೆ ಬಯಲಾಯಿತ್ತು ಗುಹೇಶ್ವರ !!

೧೭.
ಭೂತ ಭೂತವ ಕೂಡಿ ಅದ್ಭುತವಾಗಿತ್ತು :
ಕಿಚ್ಚು ಕೋಡಿತ್ತು, ನೀರು ನೀರಡಸಿತ್ತು ;
ಉರಿಪವನದೋಷದೊಳಗಿದ್ದು ವಾಯುವಿಮ್ಮಡಿಸಿತ್ತ ಕಂಡೆ
ಗುಹೇಶ್ವರ.

೧೮.
ಅಡವಿಯೊಳಗೆ ಕಳ್ಳರು
ಕಡವಸದ ಸ್ವಾಮಿಯನು ಹುಡುಕಿ ಹುಡುಕಿ
ಅರಸುತ್ತೈದಾರೆ !
ಸೊಡರು ನಂದಿ ಕಾಣದೆ
ಅನ್ನಪಾನದ ಹಿರಿಯರೆಲ್ಲರೂ ತಮ್ಮ ತಾವಱಿಯದೆ
ಅಧರಪಾನವನುಂಡು ತೇಗಿ
ಸುರಾಪಾನವ ಬೇಡುತ್ತೈದಾರೆ.
ಅಱಿದ ಹಾರುವನೊಬ್ಬನು
ಅರಿದ ತಲೆಯ ಹಿಡಿದುಕೊಂಡು
ಅಧ್ಯಾತ್ಮವಿಕಾರದ ನೆತ್ತರ ಕುಡಿದನು
ನೋಡಾ-ಗುಹೇಸ್ವರ.

೧೯.
ಮಾಯದ ಕೈಯಲ್ಲಿ ಓಲೆಕಂಠವ ಕೊಟ್ಟರೆ
ಲಗುನ-ಮಿಗುನವ ಬರೆಯಿತ್ತು ನೋಡಾ !
ಅರಗಿನ ಪುತ್ಥಳಿಗೆ ಉರಿಯ ಸೀರೆಯನುಡಿಸಿದರೆ
ಅದು ಸಿರಿಯ ಸಿಂಗಾರವಾಯಿತ್ತು ನೋಡಾ !
ಅಂಬರದೊಳಗಾಡುವ ಗಿಳಿ
ಪಂಜರದೊಳಗಣ ಬೆಕ್ಕ ನುಂಗಿ
ರಂಭೆಯ ತೋಳಿಂದಗಲಿತ್ತು ನೋಡಾ-ಗುಹೇಶ್ವರ.

೨೦.
ಕೋಣನ ಕೊಂಬಿನ ತುದಿಯಲ್ಲಿ
ಏಳುನೂರೆಪ್ಪತ್ತು ಸೇದೆಯ ಭಾವಿ.
ಭಾವಿಯೊಳಗೊಂದು ಬಗರಿಗೆ
ಬಗರಿಗೆಯೊಳಗೊಬ್ಬ ಸೂಳೆ ನೋಡಯ್ಯ !
ಆ ಸೂಳೆಯ ಕೊರಳಲ್ಲಿ
ಏಳುನೂರೆಪ್ಪತ್ತಾನೆ ನೀಱಿತ್ತ ಕಂಡೆ-ಗುಹೇಶ್ವರ.

೨೧.
ಹುಲಿಯ ತಲೆಯ ಹುಲ್ಲೆ
ಹುಲ್ಲೆಯ ತಲೆಯ ಹುಲಿ-
ಈ ಎರಡರ ನಡು ಒಂದಾಯಿತ್ತು !
ಹುಲಿಯಲ್ಲ - ಹುಲ್ಲೆಯಲ್ಲ
ಕೆಲದಲೊಂದು ಬಂದು ಮೆಲುಕಾಡಿತ್ತು ನೋಡಾ.
ತಲೆಯಿಲ್ಲದ ಮುಂಡ
ತಱಗೆಲೆಯ ಮೇದರೆ
ಎಲೆಮಱೆಯಾಯಿತ್ತು ಗುಹೇಶ್ವರ.

೨೨.
ತೋಟವ ಬಿತ್ತಿದರೆಮ್ಮವರು
ಕಾಹ ಕೊಟ್ಟರು ಜವನವರು
ನಿತ್ಯವಿಲ್ಲದ ಸಂಸಾರ ವೃಥಾ ಹೋಯಿತ್ತಲ್ಲಾ !
ಗುಹೇಶ್ವರನಿಕ್ಕಿದ ಕಿಚ್ಚು
ಹೊತ್ತಿಕ್ಕಲುಂಟು, ಅಟ್ಟುಣ್ಣಲಿಲ್ಲ.

೨೩.
ನಿರ್ಣಯವನಱಿಯದ ಮನವೇ
ದುಗುಡವನಾಹಾರಂಗೊಂಡೆಯಲ್ಲಾ !
ಮಾಯಾಸೂತ್ರವಿದೇನೋ !
ಕಂಗಳೊಳಗಣ ಕತ್ತರೆ ತಿಳಿಯದಲ್ಲಾ !
ಬೆಳಗಿನೊಳಗಣ ಶೃಂಗಾರ ಬಳಲುತ್ತಿದೆ ಗುಹೇಶ್ವರ !

ಸಂಸಾರಹೇಯ ಸ್ಥಲ

೨೪.
ಸಂಸಾರವೆಂಬ ಹೆಣ ಬಿದ್ದಿರೆ
ತಿನಬಂದ ನಾಯ ಜಗಳವ ನೋಡಿರೇ !
ನಾಯ ಜಗಳವ ನೋಡಿ
ಹೆಣನೆದ್ದು ನಗುತ್ತಿದೆ
ಗುಹೇಶ್ವರನೆಂಬ ಲಿಂಗವಲ್ಲಿಲ್ಲ ಕಾಣಿರೇ !

೨೫.
ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು
ನೊರೆತೆರೆಗಳು ತಾಗಿದವಲ್ಲಾ !
ಸಂಸಾರವೆಂಬ ಸಾಗರದೊಳಗೆ
ಸುಖ-ದು:ಖಂಗಳು ತಾಗಿದವಲ್ಲಾ !
ಇದು ಕಾರಣ
ರೂಪಾದ ಜಗಕ್ಕೆ ಪ್ರಳಯವಾಯಿತ್ತು ಗುಹೇಶ್ವರ.

೨೬.
ಕರೆಯದೇ ಬಂದುದ
ಹೇಳದೆ ಹೋದುದ-ಆರೂ ಅಱಿಯರಲ್ಲಾ !
ಅಂದಂದಿಗೆ ಬಂದ ಪ್ರಾಣಿಗಳು-ಆರೂ ಅಱಿಯರಲ್ಲಾ !
ಗುಹೇಶ್ವರಲಿಂಗ ಉಣ್ಣದೇ ಹೋದುದ-ಆರೂ ಅಱಿಯರಲ್ಲ !

೨೭.
ಆಯಿತ್ತೆ ಉದಯಮಾನ
ಹೋಯಿತ್ತೆ ಅಸ್ತಮಾನ
ಉಳಿದವಲ್ಲಾ ನೀರಲಾದ ನಿರ್ಮಿತಂಗಳೆಲ್ಲವೂ !
ಕತ್ತಲೆಗವಿಯಿತ್ತು
ಮೂಱು ಲೋಕದೊಳಗೆ
ಇದಱಚ್ಚುಗವೇನು ಹೇಳಾ ಗುಹೇಶ್ವರ ? !

೨೮.
ಕಾಲುಗಳೆರಡೂ ಗಾಲಿ ಕಂಡಯ್ಯ
ದೇಹವೆಂಬುದೊಂದು ತುಂಬಿದ ಬಂಡಿ ಕಂಡಯ್ಯ
ಬಂಡಿಯ ಹೊಡೆವರೈವರು ಮಾನಿಸರು
ಒಬ್ಬರಿಗೊಬ್ಬರು ಸಮವಿಲ್ಲಯ್ಯ.
ಅದಱಿಚ್ಛೆಯನಱಿದು ಹೊಡೆಯದಿದ್ದರೆ
ಅದುಱಚ್ಚು ಮುಱಿಯಿತ್ತು ಗುಹೇಶ್ವರ.

೨೯.
ಆರಕ್ಕೆಯ ಸಿರಿಗೆ ಆರಕ್ಕೆ ಚಿಂತಿಸುವರು !
ಆರಕ್ಕೆಯ ಬಡತನಕ್ಕೆ ಆರಕ್ಕೆ ಮುಱುಗುವರು !
ಇದಾರಕ್ಕೆ ಆರಕ್ಕೆ ?
ಇದೇನಕ್ಕೆ ಏನಕ್ಕೆ ?
ಮಾಯದ ಬೇಳುವೆ ಹುರುಳಿಲ್ಲ
ಕೊಂದು ಕೂಗಿತ್ತು ನೋಡಾ ಗುಹೇಶ್ವರ.

೩೦.
ಮಾನದ ತೋರಿಹ ಆವಿಂಗೆ
ಕೊಳಗದ ತೋರಿಹ ಕೆಚ್ಚಲು
ತಾಳಮರದುದ್ದವೆರಡು ಕೋಡು ನೋಡಾ !
ಅದುನಱಸ ಹೋಗಿ ಆಱು ದಿನ
ಅದು ಕೆಟ್ಟು ಮೂಱು ದಿನ !
ಅಘಟಿತಘಟಿತ ಗುಹೇಶ್ವರ,
ಅಱಸುವ ಬಾರೈ ತಲೆಹೊಲದಲ್ಲಿ !

೩೧.
ಕುಲದಲಧಿಕನು ಹೋಗಿ
ಹೊಲೆಗೇರಿಯಲ್ಲಿ ಮನೆಯ ಕಟ್ಟಿದರೆ
ಕುಲಗೆಡದಿಪ್ಪ ಪರಿಯ ನೋಡಾ !
ಆತನ ಕುಲದವರೆಲ್ಲರೂ ಮುಖವ ನೋಡಲೊಲ್ಲದೈದಾರೆ.
ಕುಲವುಳ್ಳವರೆಲ್ಲರು ಕೈವಿಡಿದರು
ಕುಲಗೆಟ್ಟವನೆಂದು ತಿಳಿದು
ವಿಚಾರಿಸಲು ಹೊಲೆಗೆಟ್ಟು ಹೋಯಿತ್ತು
ಕಾಣಾ ಗುಹೇಶ್ವರ.

ಗುರುಕರುಣ ಸ್ಥಲ

೩೨.
ಕಂಡುದ ಹಿಡಿಯಲೊಲ್ಲದೆ
ಕಾಣದುದನಱಸಿ ಹಿಡಿದಹೆನೆಂದರೆ
ಸಿಕ್ಕದೆಂಬ ಬಳಲಿಕೆ ನೋಡಾ !
ಕಂಡುದನೆ ಕಂಡು
ಗುರುಪಾದವ ಹಿಡಿದಲ್ಲಿ
ಕಾಣದುದ ಕಾಣಬಹುದು ಗುಹೇಶ್ವರ.

೩೩.
ಕಾಣದುದನಱಸುವರಲ್ಲದೆ ಕಂಡುದನಱಸುವರೇ ?!
ಘನಕ್ಕೆ ಘನವಾದ ವಸ್ತು
ತಾನೆ ಗುರುವಾದ, ತಾನೆ ಲಿಂಗವಾದ, ತಾನೆ ಜಂಗಮವಾದ
ತಾನೆ ಪ್ರಸಾದವಾದ, ತಾನೆ ಮಂತ್ರವಾದ, ತಾನೆ ಯಂತ್ರವಾದ
ತಾನೆ ಸಕಲವಿದ್ಯಾಸ್ವರೂಪನಾದ:
ಇಂತಿವೆಲ್ಲವನೊಳಕೊಂಡು
ಎನ್ನ ಕರಸ್ಥಲಕ್ಕೆ ಬಂದ ಬಳಿಕ
ಇನ್ನು ನಿರ್ವಿಕಾರ-ಗುಹೇಶ್ವರ.

೩೪.
ಕೃತಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬಡಿದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ತ್ರೇತಾಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಬೈದು
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ದ್ವಾಪರ ಯುಗದಲ್ಲಿ
ಶ್ರೀಗುರು ಶಿಷ್ಯಂಗೆ ಝಂಕಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಕಲಿಯುಗದಲ್ಲಿ
ಶ್ರೀಗುರು ಶಿಷ್ಯಂಗೆ ವಂದಿಸಿ
ಬುದ್ದಿಯ ಕಲಿಸಿದರೆ-ಆಗಲಿ ಮಹಾಪ್ರಸಾದವೆಂದೆನಯ್ಯ.
ಗುಹೇಶ್ವರ,
ನಿಮ್ಮ ಕಾಲದ ಕಟ್ಟಳೆಯ ಕಲಿತನಕ್ಕೆ ನಾ ಬೆಱಗಾದೆನು.

೩೫.
ಅಯ್ಯ, ನೀನೆನಗೆ ಗುರುವಪ್ಪಡೆ
ನಾ ನಿನಗೆ ಶಿಷ್ಯನಪ್ಪಡೆ,
ಎನ್ನ ಕರಣಾದಿ ಗುಣಂಗಳ ಕಳೆದು
ಎನ್ನ ಕಾಯದ ಕರ್ಮವ ತೊಡೆದು
ಎನ್ನ ಪ್ರಾಣದ ಧರ್ಮವ ತೊಡೆದು
ಎನ್ನ ಪ್ರಾಣದ ಧರ್ಮವ ನಿಲಿಸಿ,
ನೀನೆನ್ನ ಕಾಯದಲಡಗಿ
ನೀನೆನ್ನ ಪ್ರಾಣದಲಡಗಿ
ನೀನೆನ್ನ ಭಾವದಲಡಗಿ,
ನೀನೆನ್ನ ಕರಸ್ಥಲಕ್ಕೆ ಬಂದು
ಕಾರುಣ್ಯವ ಮಾಡು ಗುಹೇಶ್ವರ.

೩೬.
ಕಸ್ತುರಿಯ ಮೃಗ ಬಂದು ಸುಳಿಯಿತ್ತಯ್ಯ
ಸಕಲವಿಸ್ತಾರದ ರೂಹು ಬಂದು ನಿಂದಿತ್ತಯ್ಯ.
ಆವ ಗ್ರಹ ಬಂದು ಸೋಕಿತ್ತೆಂದಱಿಯೆನಯ್ಯ
ಆವ ಗ್ರಹ ಬಂದು ಹಿಡಿಯಿತ್ತೆಂದಱಿಯೆನಯ್ಯ.
ಹೃದಯಕಮಲಮಧ್ಯದಲ್ಲಿ
ಗುರುವನಱಿದು, ಪೂಜಿಸಿ,
ಗುರು ವಿಖ್ಯಾತನೆಂಬುದ ನಾನಱಿದೆನಯ್ಯ
ಗುರುಗುಹೇಶ್ವರನಲ್ಲಿ ಹಿಂದಣ ಹುಟ್ಟಱತು ಹೋದುದ ಕಂಡೆನಯ್ಯ.

೩೭.
ಎಣ್ಣೆ-ಬತ್ತಿ-ಪ್ರಣಿತೆ ಕೂಡಿ
ಜ್ಯೋತಿಯ ಬೆಳಗಯ್ಯ !
ಅಸ್ಥಿ-ಮಾಂಸ-ದೇಹ
ಪ್ರಾಣನಿ:ಪ್ರಾಣವಾಯಿತ್ತು !!
ದೃಷ್ಟಿವರಿದು ಮನ ಮುಟ್ಟಿದ ಪರಿ ಇನ್ನೆಂತೋ ?
ಮುಟ್ಟಿ ಲಿಂಗವ ಕೊಂಡಡೆ
ಕೆಟ್ಟಿತ್ತು ಜ್ಯೋತಿಯ ಬೆಳಗು !
ಇದು ಕಷ್ಟಕರವೆಂದಱಿದೆನು ಗುಹೇಶ್ವರ.

೩೮.
ಪಾತಾಳದಿಂದತ್ತ ಮಾತ ಬಲ್ಲವರಿಲ್ಲ
ಗಗನದಿಂದ ಮೇಲೆ ಅನುಭಾವ ತಾನಿಲ್ಲ
ಒಳಗಣ ಜ್ಯೋತಿಯ ಬೆಳಗ ಬಲ್ಲವರಿಲ್ಲ
ಹೊಱಗಣ ಹೊಱಗನು ಅಱಿಯಬಲ್ಲವರಿಲ್ಲ
ಹಿಂದಣ ಹಿಂದನು
ಮುಂದಣ ಮುಂದನು
ತಂದೆ ತೋಱಿದನು ನಮ್ಮ ಗುಹೇಶ್ವರನು.

೩೯.
ಎತ್ತಣ ಮಾಮರ
ಎತ್ತಣ ಕೋಗಿಲೆ ?
ಎತ್ತಣಿಂದೆತ್ತ ಸಂಬಂಧವಯ್ಯ ?!
ಬೆಟ್ಟದ ನೆಲ್ಲಿಯ ಕಾಯಿ
ಸಮುದ್ರದೊಳಗಣ ಉಪ್ಪು
ಎತ್ತಣಿಂದೆತ್ತ ಸಂಬಂಧವಯ್ಯಾ ?!
ಗುಹೇಶ್ವರಲಿಂಗಕ್ಕೆಯೂ
ಎನಗೆಯೂ
ಎತ್ತಣಿಂದೆತ್ತ ಸಂಬಂಧವಯ್ಯ ?!

೪೦.
ಕಾಣಬಾರದ ಲಿಂಗವು
ಕರಸ್ಥಲಕ್ಕೆ ಬಂದರೆ
ಎನಗಿದು ಸೋಜಿಗ ! ಎನಗಿದು ಸೋಜಿಗ !
ಅಹುದೆನಲಮ್ಮೆನು ಅಲ್ಲೆನಲಮ್ಮೆನು,
ಗುಹೇಶ್ವರಲಿಂಗ ನಿರಾಳ !
ನಿರಾಕಾರ ಸಾಕಾರವಾಗಿ
ಎನ್ನ ಕರಸ್ಥಲಕ್ಕೆ ಬಂದರೆ
ಹೇಳಲಮ್ಮೆ ಕೇಳಲಮ್ಮೆ.

೪೧.
ಜ್ಯೋತಿಯೊಳಗಣ ಕರ್ಪುರಕ್ಕೆ
ಅಪ್ಪುವಿನೊಳಗಿಪ್ಪ ಉಪ್ಪಿಂಗೆ
ಶ್ರೀ ಗುರುವಿನ ಹಸ್ತದೊಳಗಿಪ್ಪ ಶಿಷ್ಯಂಗೆ-
ಈ ಮೂಱಕ್ಕೆಯೂ
ಬೇಱೆ ಕ್ರಿಯಾವರ್ತನೆಯುಂಟೆ ಗುಹೇಶ್ವರ ?

೪೨.
ಗುರುಶಿಷ್ಯ ಸಂಬಂಧವನಱಸಲೆಂದು ಹೋದರೆ
ತಾನೆ ಗುರುವಾದ
ತಾನೆ ಶಿಷ್ಯನಾದ
ತಾನೆ ಲಿಂಗವಾದ.
ಗುಹೇಶ್ವರ,
ನಿಮ್ಮ ಶರಣನ ಕಾಯದ ಕೈಯಲ್ಲಿ ಲಿಂಗವ ಕೊಟ್ಟರೆ
ಭಾವ ಬತ್ತಲೆಯಾಯಿತ್ತು !

ಭಕ್ತ ಸ್ಥಲ

೪೩.
ಭವಿಯ ತಂದು ಭಕ್ತನ ಮಾಡಿ
ಪೂರ್ವಾಶ್ರಯವ ಕಳೆದ ಬಳಿಕ ಮರಳಿ ಪೂರ್ವವನೆತ್ತಿ ನುಡಿವ
ಗುರುದ್ರೋಹಿಯ ಮಾತ ಕೇಳಲಾಗದು,
ಹೆಸರಿಲ್ಲದ ಲಿಂಗಕ್ಕೆ ಹೆಸರಿಡುವ
ಲಿಂಗದ್ರೋಹಿಯ ಮಾತ ಕೇಳಲಾಗದು.
ಪೂರ್ವದಲ್ಲಿ ನಾಮವಿಲ್ಲದ ಗುರು
ಹೆಸರಿಲ್ಲದ ಲಿಂಗ, ಹೆಸರಿಲ್ಲದ ಶಿಷ್ಯ
ಇಂತೀ ತ್ರಿವಿಧಸ್ಥಲವನಱಿಯದೆ ಕೆಟ್ಟರು ಗುಹೇಶ್ವರ.

೪೪.
ಬೆವಸಾಯವ ಮಾಡಿ ಮನೆಯ ಬೀಯಕ್ಕೆ ಭತ್ತವಿಲ್ಲದಿದ್ದರೆ
ಆ ಬೆವಸಾಯದ ಗೊರ[=ಡ]ವೇತಕಯ್ಯ ?
ಕ್ರಯವಿಕ್ರಯವ ಮಾಡಿ ಮನೆಯ ಸಂಚು ನಡೆಯದನ್ನಕ್ಕ
ಆ ಕ್ರಯವಿಕ್ರಯದ ಗೊರ[=ಡ]ವೇತಕಯ್ಯ ?
ಒಡೆಯನನೋಲೈಸಿ ತನುವಿಂಗೆ ಅಷ್ಟಭೋಗವ ಪಡೆಯದಿದ್ದರೆ
ಆ ಓಲಗದ ಗೊರ[=ಡ]ವೇತಕಯ್ಯ ?
ಭಕ್ತನಾಗಿ ಭವಂನಾಸ್ತಿಯಾಗದಿದ್ದರೆ
ಆ ಉಪದೇಶವ ಕೊಟ್ಟ ಗುರು
ಕೊಂಡ ಶಿಷ್ಯ
ಇವರಿಬ್ಬರ ಮನೆಯಲ್ಲಿ ಮಾರಿ ಹೊಗಲಿ
ಗುಹೇಶ್ವರಲಿಂಗವತ್ತಲೆ ಹೊಗಲಿ.

೪೫.
ಮೇರುವ ಸಾರಿಗೆ ಕಾಗೆ ಹೊಂಬಣ್ಣವಾಗದಿದ್ದರೆ
ಆ ಮೇರುವಿಂದತ್ತಣ ಹುಲುಮೊರಡಿಯೆ ಸಾಲದೇ ?
ದೇವ, ನಿಮ್ಮ ಪೂಜಿಸಿ ಧಾವತಿಗೊಂಬಡೆ
ಆ ಧಾವತಿಯಿಂದ ಮುನ್ನಿನ ವಿಧಿಯೇ ಸಾಲದೇ?
ಗುಹೇಶ್ವರ, ನಿಮ್ಮ ಪೂಜಿಸಿ ಸಾವಡೆ
ನಿಮ್ಮಿಂದ ಹೊಱಗಣ ಜವನೆ ಸಾಲದೆ!

೪೬.
ಕಾಳರಕ್ಕಸಿಗೊಬ್ಬ ಮಗ ಹುಟ್ಟಿ
ಕಾಯದ ರಾಶಿಯ ಮೊಗೆವುತ್ತ ಸುರಿವುತ್ತಲಿದ್ದನಯ್ಯ !
ಕಾಳರಕ್ಕಸಿಯ ಮೂಗು ಮೊಲೆಯ ಕೊಯ್ದು
ದೇವಕನ್ನಿಕೆಯ ಮಱೆಹೊಕ್ಕು
ಬಾಯ ತುತ್ತೆಲ್ಲವನು ಉಣಲೊಲ್ಲದೆ ಕಾಱಿದಡೆ
ಆತನೆ ಭಕ್ತನೆಂಬೆ !

೪೭.
ಅಕ್ಷರವ ಬಲ್ಲೆವೆಂದು
ಅಹಂಕಾರವಡೆಗೊಂದು ಲೆಕ್ಕಗೊಳ್ಳರಯ್ಯ,
ಗುರುಹಿರಿಯರು ತೋರಿದ ಉಪದೇಶದಿಂದ
ವಾಗದ್ವೈತವ ಕಲಿತು, ವಾದಿಪರಲ್ಲದೆ
ಆಗು-ಹೋಗೆಂಬುದನಱಿಯರು,
ಭಕ್ತಿಯನಱಿಯರು-ಯುಕ್ತಿಯನಱಿಯರು-ಮುಕ್ತಿಯನಱಿಯರು
ಮತ್ತೂ ವಾದಿಗಳೆನಿಸುವರು
ಹೋದರು, ಗುಹೇಶ್ವರ, ಸಲೆ ಕೊಂಡ ಮಾಱಿಂಗೆ !

೪೮.
ಐದು ಮುಖದಂಗನೆಗೆ ಹದಿನೈದು ದೇಹ ನೋಡ ;
ಆ ಅಂಗನೆಯ ಮನೆಯೊಳಗಿದ್ದು
ತಾವಾರೆಂಬುದನಱಿಯದೆ
ಬಾಯಿಗೆ ಬಂದಂತೆ ನುಡಿವರು,
ಗುಹೇಶ್ವರ, ನಿಮ್ಮನಱಿಯದ ಜಡರುಗಳು.

೪೯.
ಎಣ್ಣೆ ಬೇಱೆ, ಬತ್ತಿ ಬೇಱೆ
ಎರಡೂ ಕೂಡಿ ಸೊಡರಾಯಿತ್ತು.
ಪುಣ್ಯ ಬೇಱೆ, ಪಾಪ ಬೇಱೆ
ಎರಡೂ ಕೂಡಿ ಒಡಲಾಯಿತ್ತು.
ಮಿಗಬಾರದು, ಮಿಗದಿರಬಾರದು,
ಒಡಲಿಚ್ಚೆಯ ಸಲಿಸದೆ ನಿಮಿಷವಿರಬಾರದು,
ಕಾಯಗುಣವಳಿದು,
(ಮಾಯ ಜ್ಯೋತಿ ವಾಯುವ ಕೂಡದ ಮುನ್ನ)
ಭಕ್ತಿಯ ಮಾಡಬಲ್ಲಾತನೇ ದೇವ, ಗುಹೇಶ್ವರ.

೫೦.
ಹೊನ್ನು ಮಾಯೆಯೆಂಬರು
ಹೊನ್ನು ಮಾಯೆಯಲ್ಲ.
ಹೆಣ್ಣು ಮಾಯೆಯೆಂಬರು
ಹೆಣ್ಣು ಮಾಯೆಯಲ್ಲ.
ಮಣ್ಣು ಮಾಯೆಯೆಂಬರು
ಮಣ್ಣು ಮಾಯೆಯಲ್ಲ.
ಮನದ ಮುಂದಣ ಆಶೆಯೇ ಮಾಯೆ ಕಾಣಾ
ಗುಹೇಶ್ವರ !

೫೧.
ಕಳ್ಳಗಂಜಿ ಕಾಡ ಹೊಕ್ಕಡೆ
ಹುಲಿ ತಿನ್ನದೆ ಮಾಬುದೇ ?
ಹುಲಿಗಂಜಿ ಹುತ್ತವ ಹೊಕ್ಕಡೆ
ಸರ್ಪ ತಿನ್ನದೆ ಮಾಬುದೇ ?
ಕಾಲಕ್ಕಂಜಿ ಭಕ್ತನಾದಡೆ ಕರ್ಮ ತಿನ್ನದೆ ಮಾಬುದೇ ?
ಇಂತೀ ಮೃತ್ಯುವಿನ ಬಾಯ ತುತ್ತಾದ
ವೇಷಡಂಬಕರನೇನೆಂಬೆ - ಗುಹೇಶ್ವರ !

೫೨.
ಐದು ಸರ್ಪಂಗಳಿಗೆ
ತನುವೊಂದು, ದಂತವೆರಡು !
ಸರ್ಪ ಕಡಿದು ಸತ್ತ ಹೆಣನು ಸುಳಿದಾಡುವುದ ಕಂಡೆ !
ಈ ನಿತ್ಯವನಱಿಯದ ಠಾವಿನಲ್ಲಿ
ಭಕ್ತಿಯೆಲ್ಲಿಯದೊ ಗುಹೇಶ್ವರ ?!

೫೩.
ಆರೂ ಇಲ್ಲದಾರಣ್ಯದೊಳಗೆ ಮನೆಯ ಕಟ್ಟಿದರೆ
ಕಾಡುಗಿಚ್ಚು ಎದ್ದು ಬಂದು ಹತ್ತಿತಲ್ಲ !
ಆ ಉರಿಯೊಳಗೆ ಮನೆ ಬೇವಲ್ಲಿ
ಮನೆಯೊಡೆಯನೆತ್ತ ಹೋದನೋ ?!
ಆ ಉರಿಯೊಳಗೆ ಬೆಂದ ಮನೆ
ಚೇಗೆಯಾಗದುದ ಕಂಡು
ಮನೆಯೊಡೆಯನಳಲುತ್ತ ಬಳಲುತ್ತೈದಾನೆ.
ಗುಹೇಶ್ವರ.
ನಿಮ್ಮ ಒಲವಿಲ್ಲದ ಠಾವ ಕಂಡು
ಹೇಸಿ ತೊಲಗಿದೆನಯ್ಯ !

೫೪.
ಪ್ರಣಿತೆಯೂ ಇದೆ
ಬತ್ತಿಯೂ ಇದೆ -
ಜ್ಯೋತಿಯ ಬೆಳಗುವಡೆ
ತೈಲವಿಲ್ಲದೆ ಪ್ರಭೆ ತಾನೆಲ್ಲಿಯದೋ ?!
ಗುರುವಿದೆ
ಲಿಂಗವಿದೆ -
ಶಿಷ್ಯನ ಸುಜ್ಞಾನವಂಕುರಿಸದನ್ನಕ್ಕರ ಭಕ್ತಿಯೆಲ್ಲಿಯದೋ ?!
ಸೋಹಮೆಂಬುದ ಕೇಳಿ, ದಾಸೋಹವ ಮಾಡದಿದ್ದರೆ
ಅತಿಗಳೆದನು ಗುಹೇಶ್ವರ.

೫೫.
ಘನತರಚಿತ್ರದ ರೂಹ ಬರೆಯಬಹುದಲ್ಲದೆ
ಪ್ರಾಣವ ಬರೆಯಬಹುದೇ ?
ಅಯ್ಯ,
ದಿವ್ಯಾಗಮಂಗಳು ಹೇಳಿದ ಕ್ರೀಯಲು ದೀಕ್ಷೆಯ ಮಾಡಬಹುದಲ್ಲದೆ
ಭಕ್ತಿಯ ಮಾಡಬಹುದೇ ?
ಅಯ್ಯ,
ಪ್ರಾಣವಹ ಭಕ್ತಿಯ ತನ್ಮಯ ನೀನು !
ಈ ಗುಣವುಳ್ಳಲ್ಲಿ ನೀನಿಹೆ
ಇಲ್ಲದಲ್ಲಿ ನೀನಿಲ್ಲ, ಗುಹೇಶ್ವರ.

೫೬.
ಕಾಯಕ್ಕೆ ಮಜ್ಜನ
ಪ್ರಾಣಕ್ಕೆ ಓಗರ
ಇವ ಮಾಡಲೆ ಬೇಕು,
ಸುಳಿವ ಸುಳುಹುಳ್ಳನ್ನಕ್ಕರ
ಇವ ಮಾಡಲೆ ಬೇಕು
ಗುಹೇಶ್ವರನೆಂಬ ಲಿಂಗಕ್ಕೆ
ಆತ್ಮನುಳ್ಳಕ್ಕರ ಭಕ್ತಿಯ ಮಾಡಲೆ ಬೇಕು.

೫೭.
ಅದ್ವೈತವ ನುಡಿದು ಅಹಂಕಾರಿಯಾದೆನಯ್ಯ
ಬ್ರಹ್ಮವ ನುಡಿದು ಭ್ರಮಿತನಾದೆನಯ್ಯ
ಶೂನ್ಯವ ನುಡಿದು ಸುಖದು:ಖಕ್ಕೆ ಗುರಿಯಾದೆನಯ್ಯ
ಗುಹೇಶ್ವರ, ನಿಮ್ಮ ಶರಣ ಸಂಗನ ಬಸವಣ್ಣನ ಸಾನ್ನಿಧ್ಯದಿಂದ
ನಾನು ಸದ್ಭಕ್ತನಾದೆನಯ್ಯ.

೫೮.
'ದೇವ' ಕಂಡಾ.
'ಭಕ್ತ' ಕಂಡಾ
ವಕರಳಿ ಮರಳಿ ಶರಣೆಂಬ ಕಂಡಾ !
ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ !
ಸಾವನ್ನಕ್ಕರ ಸರ ಉಂಟೇ, ಗುಹೇಶ್ವರ.

೫೯.
ಮುಂದು ಜಾವದಲೆದ್ದು
ಲಿಂಗದಂಘ್ರಿಯ ಮುಟ್ಟಿ,
ಸುಪ್ರಭಾತ ಸಮಯದಲ್ಲಿ
ಶಿವಭಕ್ತರ ಮುಖವ ನೋಡುವುದು,
ಹುಟ್ಟಿದುದಕ್ಕಿದೆ ಸಫಲ ನೋಡಾ !
ಸತ್ಯವಚನವಿಂತೆಂದುದು ;
"ಇವಿಲ್ಲದವರ ನಾನೊಲ್ಲೆ"
ಗುಹೇಶ್ವರ.

೬೦.
ಆಚಾರವಱಿಯದೆ
ವಿಭವವಳಿಯದೆ ;
ಕೋಪವಡಗದೆ
ತಾಪ ಮುಱಿಯದೆ-
ಬಱಿದೆ ಭಕ್ತರಾದೆವೆಂದು
ಬೆಬ್ಬನೆ ಬೆಱೆವವರ ಕೇಡಿಂಗೆ ನಾನು ಮಱುಗುವೆನು ಕಾಣಾ
ಗುಹೇಶ್ವರ.

೬೧.
ಆಸೆಗೆ ಸತ್ತುದು ಕೋಟಿ !
ಆಮಿಷಕ್ಕೆ ಸತ್ತುದು ಕೋಟಿ !
ಹೊನ್ನು-ಹೆಣ್ಣು-ಮಣ್ಣಿಂದು ಸತ್ತುದು ಕೋಟಿ !
ಗುಹೇಶ್ವರ,
ನಿಮಗಾಗಿ ಸತ್ತವರನಾರನೂ ಕಾಣೆ !!

೬೨.
ಹೃದಯಕಮಲದೊಳಗೊಂದು
ಮಱಿದುಂಬಿ ಹುಟ್ಟಿತ್ತು !
ಹಾರಿ ಹೋಗಿ ಆಕಾಶವ ನುಂಗಿತ್ತಯ್ಯಾ !!
ಆ ತುಂಬಿಯ ಗಱಿಯ ಗಾಳಿಯಲ್ಲಿ
ಮೂಱು ಲೋಕವೆಲ್ಲವೂ ತಲೆಕೆಳಗಾಯಿತ್ತು !!!
ಪಂಚವರ್ಣದ ಹಂಸೆಯ ಪಂಜರವ ಖಂಡಿಸಿದರೆ
ಗಱಿ ಮುಱಿದು, ತುಂಬಿ ನೆಲಕ್ಕುರುಳಿತ್ತು !
ನಿಜದುದಯದ ಬೆಡಗಿನ ಕೀಲ -
ಗುಹೇಶ್ವರ,
ನಿಮ್ಮ ಶರಣರನುಭಾವಸಂಗದಲ್ಲಿದ್ದು ಕಂಡೆನಯ್ಯ.

೬೩.
ಕಬ್ಬಿನಲ್ಲಿ ಬಿಲ್ಲ ಮಾಡಿ
ಪರಿಮಳದಲ್ಲಿ ಅಂಬ ಮಾಡಿ
ನಲ್ಲೋ ಬಿಲ್ಲಾಳೇ,
ಎನ್ನ ಮನದಲ್ಲಿ ಎಸೆಯ ಬಲ್ಲೆಯಲ್ಲಾ
ಗುಹೇಶ್ವರನೆಂಬ ಲಿಂಗವನು ?!

೬೪.
ಅಮರಾವತಿಯ ಪಟ್ಟಣದೊಳಗೆ
ದೇವೇಂದ್ರನಾಳುವ ನಂದನವನವಯ್ಯ !
ಅತ್ತ ಸಾರೆಲೆ ಕಾಮ, ಮೋಹವೆ ನಿನಗೆ ?
ಲೋಕಾದಿಲೋಕವನೆಲ್ಲವ ಮರುಳುಮಾಡಿದೆ-
ಕಾಮ, ಗುಹೇಶ್ವರಲಿಂಗವನಱಿ ಭೋ!

೬೫.
ಎಸೆಯದಿರು, ಎಸೆಯದಿರು
ಕಾಮ, ನಿನ್ನ ಬಾಣ ಹುಸಿಯಲೇಕೋ ?
ಲೋಭ-ಮೋಹ-ಮದ-ಮತ್ಸರ
ಇವು ಸಾಲದೇ ನಿನಗೆ ?
ಗುಹೇಶ್ವರಲಿಂಗದ ವಿರಹದಲ್ಲಿ ಬೆಂದವರ
ಮರಳಿ ಸುಡಲುಂಟೇ ಮರುಳು ಕಾಮ ?!

೬೬.
ಬಿಸುವಂತೆ ! ಜವಳಿಗಂಭ !!
ಲೇಸಾಯಿತ್ತು ಮನೆ
ಲೇಸಾಯಿತ್ತು ಮೇಲುವೊದಿಕೆ
ಮಗುಳೆ ಆ ಅಂಗಕ್ಕೆ ಕಿಚ್ಚನಿಕ್ಕಿ
ಮನೆಯನಿಂಬುಮಾಡಿದೆ ಲಿಂಗಜಂಗಮಕ್ಕೆ !
ಹುಟ್ಟುಗೆಟ್ಟು ಬಟ್ಟಬಯಲಲ್ಲಿ ನಾನಿದೇನೆ ಗುಹೇಶ್ವರ.

೬೭.
ತನು ತರತರಂಬೋಗಿ
ಮನವು ನಿಮ್ಮಲ್ಲಿ ಸಿಲುಕಿತ್ತಯ್ಯ.
ನೋಟವೇ ಪ್ರಾಣವಾಗಿ
ಆಪ್ಯಾಯನ ನಿಮ್ಮಲ್ಲಿ ಅಱಿತುದಯ್ಯ
ಸಿಲುಕಿತ್ತು ಶೂನ್ಯದೊಳಗೆ
ಗುಹೇಶ್ವರ ನಿರಾಳವಯ್ಯ.

೬೮.
ಮನ ಬಸುಱಾದರೆ ಕೈ ಬೆಸಲಾಯಿತ್ತ ಕಂಡೆ !
ಕರ್ಪುರದ ಕಂಪ ಕಿವಿ ಕುಡಿಯಿತ್ತ ಕಂಡೆ !
ಮುತ್ತಿನ ಢಾಳವ ಮೂಗು ನುಂಗಿತ್ತ ಕಂಡೆ !
ಕಂಗಳು ಹಸಿದು ವಜ್ರವ ನುಂಗಿತ್ತ ಕಂಡೆ !
ಒಂದು ನೀಲದೊಳಗೆ ಮೂಱು ಲೋಕವಡಗಿತ್ತ ಕಂಡೆ !
ಗುಹೇಶ್ವರ.

೬೯.
ನಿಚ್ಚಕ್ಕೆ ನಿಚ್ಚ ಒತ್ತೆಯ ಬೇಡಿದಡೆ
ಅಚ್ಚಿಗವಾಯಿತ್ತವ್ವಾ, ನಮ್ಮ ನಲ್ಲಂಗೆ
ಕಿಚ್ಚನೆ ಹೊತ್ತುಕೊಂಡು
ಅಚ್ಚನೆಯಾಡಲು
ಅಚ್ಚುಗವಾಯಿತ್ತವ್ವಾ, ನಮ್ಮ ನಲ್ಲಂಗೆ !
ಅಚ್ಚನೆಯ ಗಳಿಹವನಿಳುಹಿದರೆ
ಬಳಿಕ ನಿಶ್ಚಿಂತವಾಯಿತ್ತು, ಗುಹೇಶ್ವರ !!!

೭೦.
ಆಸೆಯೆಂಬ ಕೂಸನೆತ್ತಲು
ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ !
ಇಂತೆರಡಿಲ್ಲದ ಕೂಸನೆತ್ತಬಲ್ಲಡೆ
ಅವ ಅಚ್ಚ ಶೀಲವಂತನೆಂಬೆ ಕಾಣಾ ಗುಹೇಶ್ವರ.

೭೧.
ತಾಯಿ ಬಂಜೆಯಾದಲ್ಲದೆ ಶಿಶು ಗತವಾಗದು.
ಬೀಜ ನಷ್ಟವಾದಲ್ಲದೆ ಸಸಿ ಗತವಾಗದು
ನಾಮ ನಷ್ಟವಿಲ್ಲದೆ ನೇಮ ನಷ್ಟವಾಗದು
ಮೊದಲುಗೆಟ್ಟಲ್ಲದೆ ಲಾಭದಾಸೆ ಬಿಡದು
ಗುಹೇಶ್ವರಲಿಂಗದ ನಿಜವನೆಯ್ದುವಡೆ
ಪೂಜೆಯ ಫಲ ಮಾದಲ್ಲದೆ ಭವಂ ನಾಸ್ತಿಯಾಗದು.

೭೨.
ಬೆಟ್ಟಕ್ಕೆ ಚಳಿಯಾದಡೆ
ಏನ ಹೊದಿಸುವಿರಯ್ಯ !
ಬಯಲು ಬತ್ತಲೆಯಾದಡೆ
ಏನ ನುಡಿಸುವರಯ್ಯ ?
ಭಕ್ತನು ಭವಿಯಾದಡೆ
ಏನನುಪಮಿಸುವೆನಯ್ಯ - ಗುಹೇಶ್ವರ ?

೭೩.
ಸತ್ತ ಬಳಿಕ ಮುಕ್ತಿಯ ಹಡೆದಹೆನೆಂದು
ಪೂಜಿಸ ಹೋದರೆ
ಆ ದೇವರೇನ ಕೊಡುವರೋ ?
ಸಾಯದೆ-ನೋಯದೆ-ಸ್ವತಂತ್ರನಾಗಿ
ಸಂದು-ಭೇದವಿಲ್ಲದಿಪ್ಪ, ಗುಹೇಶ್ವರ, ನಿಮ್ಮ ಶರಣ.

ಮಾಹೇಶ್ವರ ಸ್ಥಲ

೭೪.
ಕುರೂಪಿ
ಸುರೂಪಿಯ ನೆನೆದಡೆ
ಸುರೂಪಿಯಪ್ಪನೆ ?
ಆ ಸುರೂಪಿ
ಕುರೂಪಿಯ ನೆನದಡೆ
ಕುರೂಪಿಯಪ್ಪನೆ ?
ಧನವುಳ್ಳವರ ನೆನೆದಡೆ ದರಿದ್ರ ಹೋಹುದೇ ?
ಪುರಾತರ ನೆನೆದು ಕೃತಾರ್ಥರಾದೆವೆಂಬರು !
ತಮ್ಮಲ್ಲಿ ಭಕ್ತಿನಿಷ್ಠೆಯಿಲ್ಲದವರ ಕಂಡಡೆ
ಮೆಚ್ಚನು ಗುಹೇಶ್ವರನು.

೭೫.
ಕಾರಣವಿಲ್ಲ, ಕಾರ್ಯವಿಲ್ಲ.
ಏತಕ್ಕೆ ಭಕ್ತರಾದೆವೆಂಬಿರೋ ?
ಐವರ ಬಾಯ ಎಂಜಲನುಂಬಿರಿ !
ಐವರು ಸ್ತ್ರೀಯರ ಮುಖವನಱಿಯಿರಿ !
ಮೂಱು ಸಂಕಲೆಯ ಕಳೆಯಲಱಿಯಿರಿ !
ಕಾಯವಿಡಿದು ಲಿಂಗವ ಮುಟ್ಟಿಹೆನೆಂಬ
ಭ್ರಮೆಯ ನೋಡಾ, ಗುಹೇಶ್ವರ.

೭೬.
ಉದಯವಾಯಿತ್ತ ಕಂಡು
ಉದರಕ್ಕೆ ಕುದಿವರಯ್ಯ !
ಕತ್ತಲೆಯಾಯಿತ್ತ ಕಂಡು
ಮಜ್ಜನಕ್ಕೆಱೆವರಯ್ಯ ! ಲಿಂಗಕ್ಕೆ ನೇಮವಿಲ್ಲ !
ಇರುಳಿಗೊಂದು ನೇಮ !
ಹಗಲಿಗೊಂದು ನೇಮ ! ಲಿಂಗಕ್ಕೆ ನೇಮವಿಲ್ಲ !
ಕಾಯ ಒಂದೆಸೆ
ಜೀವ ಒಂದೆಸೆ
ಗುಹೇಶ್ವರನೆಂಬ ಲಿಂಗವು ತಾನೊಂದೆಸೆ !

೭೭.
ಅಗ್ರವಣಿ-ಪತ್ರೆ-ಧೂಪ-ದೀಪನಿವಾಳಿಯಲ್ಲಿ
ಪೂಜಿಸಿ ಪೂಜಿಸಿ ಬಳಲುತ್ತೈದಾರೆ !
ಏನೆಂದಱಿಯರು ! ಎಂತೆಂದಱಿಯರು !
ಜನಮರುಳೋ ಜಾತ್ರೆ ಮರುಳೋ-
ಎಂಬಂತೆ ಎಲ್ಲರೂ ಪೂಜಿಸಿ
ಏನನೂ ಕಾಣದೆ
ಲಯವಾಗಿ ಹೋದರು, ಗುಹೇಶ್ವರ.

೭೮.
ಮಜ್ಜನಕ್ಕೆಱೆದು ಫಲವ ಬೇಡುವರಯ್ಯ
ತಮಗೆಲ್ಲಿಯದೋ ಆ ಫಲವು ಸೀತಾಳಕ್ಕಲ್ಲದೆ ?
ಪತ್ರೆ-ಪುಷ್ಪದಲ್ಲಿ ಪೂಜಿಸಿ ಫಲವು ಬೇಡುವರಯ್ಯ
ತಮಗೆಲ್ಲಿಯದೋ ಆ ಫಲವು ಗಿಡುಗಳಿಗಲ್ಲದೆ ?
ಸಯಿಧಾನವರ್ಪಿಸಿ ಪ್ರಸಾದದ ಫಲವ ಬೇಡುವರಯ್ಯ
ತಮಗೆಲ್ಲಿಯದೋ ಆ ಫಲವು ಹದಿನೆಂಟು ಧಾನ್ಯಕ್ಕಲ್ಲದೆ ?
ಲಿಂಗದೊಡೆಯ ಲಿಂಗಕ್ಕೆ ಕೊಟ್ಟು
ಫಲವ ಬೇಡುವ ಸರ್ವಾನ್ಯಾಯಿಗಳನೇನೆಂಬೆ ಗುಹೇಶ್ವರ.

೭೯.
ಜಾಲಗಾಱನ ಕಾಲು ಮುಳ್ಳು ತಾಗಿ ನೊಂದಿತ್ತೆಂಬಂತೆ
ಸೂನೆಗಾಱನ ಮನೆಯಲ್ಲಿ ಹೆಣ ಹೋಗಿ ಅಳುವಂತೆ
ಕನ್ನಗಳ್ಳನ ಮನೆಯಲ್ಲಿ ಬಟ್ಟಲು ಹೋಗಿ ಮಱುಗುವಂತೆ
ಠಕ್ಕನ ಪೂಜೆಗೆ ಮೆಚ್ಚುವನೇ ನಮ್ಮ ಗುಹೇಶ್ವರನು ?

೮೦.
ಸಾಸವೆಯಷ್ಟು ಸುಖಕ್ಕೆ
ಸಾಗರದಷ್ಟು ದುಃಖ ನೋಡಾ !
ಘಳಿಗೆಯ ಬೇಟವ ಮಾಡಿಹೆನೆಂಬ
ಪರಿಯ ನೋಡಾ !
ತನ್ನನಿಕ್ಕಿ ನಿಧಾನವ ಸಾಧಿಸಿಹೆನೆಂದಡೆ
ಬಿನ್ನಾಣ ತಪ್ಪಿತ್ತು ಗುಹೇಶ್ವರ.

೮೧.
ಮಜ್ಜನಕ್ಕೆಱೆವರೆಲ್ಲಾ ಇದ್ದಲ್ಲಿ ಫಲವೇನು ?
ಮುದ್ರೆಧಾರಿಗಳಪ್ಪರಯ್ಯ !
ಲಿಂಗದಲ್ಲಿ ನಿಷ್ಠೆಯಿಲ್ಲ
ಜಂಗಮದಲ್ಲಿ ಪ್ರೇಮಿಗಳಲ್ಲ
ವೇಷಲಾಂಛನಧಾರಿಗಳಪ್ಪರಯ್ಯ !
ನೋಡಿ ಮಾಡುವ ಭಕ್ತಿ ಸಜ್ಜನಸಾರಾಯವಲ್ಲ
ಗುಹೇಶ್ವರ ಮೆಚ್ಚನಯ್ಯ !

೮೨.
ಕೊಟ್ಟ ಕುದುರೆಯನೇಱಲಱಿಯದೆ
ಮತ್ತೊಂದು ಕುದುರೆಯ ಬಯಸುವರು
ವೀರರೂ ಅಲ್ಲ ! ಧೀರರೂ ಅಲ್ಲ !!
ಇದು ಕಾರಣ
ನೆಱೆ ಮೂಱು ಲೋಕವೆಲ್ಲವೂ
ಹಲ್ಲಣವ ಹೊತ್ತುಕೊಂಡು ಬಳಲುತ್ತೈದಾರೆ
ಗುಹೇಶ್ವರನೆಂಬ ಲಿಂಗವನವರೆತ್ತಬಲ್ಲರೋ ?

೮೩.
ಜೀವವಿಲ್ಲದ ಹೆಣನ ಹಿಡಿದಾರುವರಯ್ಯ
ಪ್ರತಿಯಿಲ್ಲದ ಪ್ರತಿಗೆ ಪ್ರತಿಯ ಮಾಡುವರಯ್ಯ
ಶಿರವಿಲ್ಲದ ಮುಂಡಕ್ಕೆ ಸೇಸೆಯನಿಕ್ಕುವರು ಗುಹೇಶ್ವರ !

೮೪.
ಆದ್ಯರಲ್ಲ ! ವೇದ್ಯರಲ್ಲ !
ಸಾಧ್ಯರಲ್ಲದ ಹಿರಿಯರ ನೋಡಾ !
ತನುವಿಕಾರ ! ಮನವಿಕಾರ !
ಇಂದ್ರಿಯವಿಕಾರದ ಹಿರಿಯರ ನೋಡಾ !
ಶಿವಚಿಂತೆ ಶಿವಜ್ಞಾನಿಗಳ ಕಂಡರೆ
ಅಳವಾಡಿ ನುಡಿವರು
ಗುಹೇಶ್ವರನಱಿಯದ ಕರ್ಮಿಗಳಯ್ಯ !

೮೫.
ಆಳವಱಿಯದ ಭಾಷೆ
ಬಹುಕುಳವಾದ ನುಡಿ
ಇಂತೆರಡಱ ನುಡಿ ಹುಸಿಯಯ್ಯ !
ಬಹುಭಾಷಿತರು, ಸುಭಾಷಿತವರ್ಜಿತರು
"ಶರಣಸತಿ ಲಿಂಗಪತಿ" ಎಂಬರು
ಹುಸಿಯಯ್ಯ !
ಇಂತಪ್ಪವರ ಕಂಡು ನಾಚಿದೆನಯ್ಯ ಗುಹೇಶ್ವರ.

೮೬.
ದೇಶ ಗುಱಿಯಾಗಿ
ಲಯವಾಗಿ ಹೋದವರ ಕಂಡೆ !
ತಮಂಧ ಗುಱಿಯಾಗಿ
ಲಯವಾಗಿ ಹೋದವರ ಕಂಡೆ !
ಕಾಮ ಗುಱಿಯಾಗಿ
ಬೆಂದುಹೋದವರ ಕಂಡೆ !
ನೀ ಗುಱಿಯಾಗಿ
ಲಯವಾಗಿ ಹೋದವರನಾರನೂ ಕಾಣೆ ಗುಹೇಶ್ವರ.

೮೭.
ಮರನೊಳಗಣ ಪತ್ರೆ ಫಲಂಗಳು
ಮರ ಕಾಲವಶದಲ್ಲಿ ತೋರುವಂತೆ,
ಹರನೊಳಗಣ ಪ್ರಕೃತಿಸ್ವಭಾವಂಗಳು
ಹರಭಾವದಿಚ್ಚೆಗೆ ತೋಱುವವು !
ಲೀಲೆಯಾದಡುಮಾಪತಿ
ಲೀಲೆ ತಪ್ಪಿದಡೆ ಸ್ವಯಂಭು ಗುಹೇಶ್ವರ.

೮೮.
ಓಡಿನೊಳಗುಂಟೆ ಕನ್ನಡಿಯ ನೋಟ ?
ಮರುಳಿನ ಕೂಟ ವಿಪರೀತಚರಿತ್ರ !
ನೋಟದ ಸುಖ ತಾಗಿ ಕೋಟಲೆಗೊಂಡೆನು
ಗುಹೇಶ್ವರನೊಬ್ಬನೆ ಅಚಳ
ಉಳಿದವರೆಲ್ಲರೂ ಸೂತಕಿಗಳು.

೮೯.
ಸತಿ ಭಕ್ತೆಯಾದಡೆ ಹೊಲೆಗಂಜಲಾಗದು.
ಪತಿ ಭಕ್ತನಾದಡೆ ಕುಲಕಂಜಲಾಗದು.
ಸತಿ-ಪತಿಯೆಂಬ ಅಂಗಸುಖ ಹಿಂಗಿ
ಲಿಂಗವೆ ಪತಿಯಾದ ಬಳಿಕ
ಸತಿಗೆ ಪತಿಯುಂಟೆ?
ಪತಿಗೆ ಸತಿಯುಂಟೆ?
ಪಾಲುಂಡು ಮೇಲುಂಬರೇ ಗುಹೇಶ್ವರ ?!

೯೦.
ಪಂಚೇಂದ್ರಿಯ ಸಪ್ತಧಾತುವನತಿಗಳೆದಲ್ಲಿ
ಘನವೇನೋ ?
ಕಾಮ-ಕ್ರೋಧ-ಲೋಭ-ಮೋಹ-
ಮದ-ಮತ್ಸರವಿಷಯವನತಿಗಳೆದಲ್ಲಿ
ಫಲವೇನೋ ?
ಇವೆಲ್ಲವ ಕೊಂದ ಪಾಪ ನಿಮ್ಮ ತಾಗುವುದು,
ಗುಹೇಶ್ವರ.

೯೧.
ಲಿಂಗ ಒಳಗೋ ಹೊಱಗೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಎಡನೋ ಬಲನೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಮುಂದೋ ಹಿಂದೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಸ್ಥೂಲವೋ ಸೂಕ್ಷ್ಮವೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಪ್ರಾಣವೋ, ಪ್ರಾಣ ಲಿಂಗವೋ ?
ಬಲ್ಲಡೆ ನೀವು ಹೇಳಿರೇ ? ಗುಹೇಶ್ವರ.

೯೨.
ತನುವಿಂಗೆ ತನುವಾಗಿ
ಮನಕ್ಕೆ ಮನವಾಗಿ
ಜೀವಕ್ಕೆ ಜೀವವಾಗಿ ಇದ್ದುದನಾರು ಬಲ್ಲರೋ ?!
ಅದು ದೂರವೆಂದು
ಸಮೀಪವೆಂದು
ಮಹಂತ ಗುಹೇಶ್ವರನೊಳಗೆಂದು
ಹೊಱಗೆಂದು
ಬಱುಸೂಱೆವೋದರು !

ಪ್ರಸಾದಿ ಸ್ಥಲ

೯೩.
ಲಿಂಗಾರ್ಚನೆಯಿಲ್ಲದ ಮುನ್ನ
ಸಿಂಗಿಯಾನಾರೋಗಿಸಿದಿರಿ
ಸಂಜೆ ಸಮಾಧಿಗಳಿಲ್ಲದ ಮುನ್ನ ಉಂಡಿರಿ ಚೆನ್ನನ ಮನೆಯಲ್ಲಿ
ಚಿತ್ರಗುಪ್ತರಱಿಯದ ಮುನ್ನ ಎತ್ತಿದಿರಿ ಕಾಂಚಿಯ ಪುರವ
ಬೈಚಿಟ್ಟಿರಿ ಕೈಲಾಸವ ನಿಮ್ಮ ಚಿಕ್ಕುಟಾಧಾರದಲ್ಲಿ
ಈರೇಳು ಭುವನಂಗಳೆಲ್ಲವೂ ನಿಮ್ಮ ರೋಮಕೂಪದಲ್ಲಡಗಿದವು
ಪ್ರಾಣಾಪಾನ ವ್ಯಾನೋದಾನ ಸಮಾನರಹಿತ ಗುಹೇಶ್ವರ.

೯೪.
ತ್ರಿವಿಧ ನಿತ್ಯವ
ತ್ರಿವಿಧ ಅನಿತ್ಯವ ಬಲ್ಲವರಾರೋ ?
ತ್ರಿವಿಧಕ್ಕೆ ತ್ರಿವಿಧವನಿತ್ತು
ತ್ರಿವಿಧಪ್ರಸಾದದ ಕೊಳಬಲ್ಲಡೆ
ಆತನ ಧೀರನೆಂಬೆ !
ಆತನ
ಗುಹೇಶ್ವರಲಿಂಗದಲ್ಲಿ ಅಚ್ಚಪ್ರಸಾದಿಯೆಂಬೆ !

೯೫.
ಬೇಡದ ಮುನ್ನ ಮಾಡಬಲ್ಲಡೆ ಭಕ್ತ
ಬೇಡುವನೆ ಲಿಂಗಜಂಗಮ ?
ಬೇಡುವರಿಗೆಯೂ
ಬೇಡಿಸಿಕೊಂಬವರಿಗೆಯೂ
ಪ್ರಸಾದವಿಲ್ಲ ಗುಹೇಶ್ವರ.

೯೬.
ಒಳಗ ತೊಳೆಯಲಱಿಯದೇ
ಹೊಱಗ ತೊಳೆದು ಕುಡಿಯುತ್ತಿದ್ದರಯ್ಯ !
ಪಾದೋದಕ-ಪ್ರಸಾದವನಱಿಯದೆ
ಬಂದ ಬಟ್ಟೆಯಲ್ಲಿ ಮುಳುಗುತ್ತೈದಾರೆ ಗುಹೇಶ್ವರ.

೯೭.
ಮಾಡಿದ ಓಗರ ಮಾಡಿದಂತೆ ಇದ್ದಿತು
ನೀಡುವ ಕೈಗಳೆಡೆಯಾಡುತ್ತಿದ್ದವು.
ಲಿಂಗಕ್ಕರ್ಪಿತವ ಮಾಡಿದೆನೆಂಬರು.
ಒಂದಱಲೊಂದು ಸವೆಯದು ನೋಡಾ
ಲಿಂಗನಾರೋಗಣೆಯ ಮಾಡಿದನೆಂಬರು
ತಾವುಂಡು ನಿಮ್ಮ ದೂಱುವರು ಗುಹೇಶ್ವರ.

೯೮.
ತನ್ನ ಮುಟ್ಟಿ ನೀಡಿದುದೇ ಪ್ರಸಾದ.
ತನ್ನ ಮುಟ್ಟದೇ ನೀಡಿದುದೇ ಓಗರ.
ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ.
ಇದುಕಾರಣ-
ಇಂತಪ್ಪ ಭೃತ್ಯಾಚಾರಿಗಲ್ಲದೆ ಪ್ರಸಾದವಿಲ್ಲ ಗುಹೇಶ್ವರ.

೯೯.
ಆಧಿಯಿಲ್ಲದಿದ್ದಡೆ
ಲಿಂಗಪ್ರಸಾದಿಯೆಂಬೆ !
ವ್ಯಾಧಿಯಿಲ್ಲದಿದ್ದಡೆ
ಜಂಗಮಪ್ರಸಾದಿಯೆಂಬೆ !
ಲೌಕಿಕ ಸೋಂಕದಿದ್ದಡೆ
ಸಮಯಪ್ರಸಾದಿಯೆಂಬೆ !
ಇಂತೀ ತ್ರಿವಿಧಪ್ರಸಾದಸಂಬಂಧಿಯಾದಾತನ
ಅಚ್ಚಪ್ರಸಾದಿಯೆಂಬೆನು ಕಾಣಾ ಗುಹೇಶ್ವರ.

೧೦೦.
ಪದವನರ್ಪಿಸಬಹುದಲ್ಲದೆ
ಪದಾರ್ಥವನರ್ಪಿಸಬಾರದು !
ಓಗರವನರ್ಪಿಸಬಹುದಲ್ಲದೆ
ಪ್ರಸಾದವನರ್ಪಿಸಬಾರದು !
ಗುಹೇಶ್ವರ, ನಿಮ್ಮ ಶರಣರು
ಹಿಂದ ನೋಡಿ ಮುಂದನರ್ಪಿಸಿದರು !

ಪ್ರಾಣಲಿಂಗಿ ಸ್ಥಲ

೧೦೧.
ಪ್ರಣವಮಂತ್ರವ ಕರ್ಣದಲಿ ಹೇಳಿ
ಶ್ರೀಗುರು ಶಿಷ್ಯನ ಅಂಗದ ಮೇಲೆ
ಲಿಂಗಪ್ರತಿಷ್ಠೆಯ ಮಾಡಿದ ಬಳಿಕ
ಪ್ರಾಣದಲಿ ಲಿಂಗವಿಪ್ಪುದೆಂಬ
ವ್ರತಗೇಡಿಗಳ ಮಾತ ಕೇಳಲಾಗದು.
ಒಳಗಿಪ್ಪನೇ ಲಿಂಗದೇವನು
ಮಲ-ಮೂತ್ರ-ಮಾಂಸದ ಹೇಸಿಕೆಯೊಳಗೆ ?
ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೇ ?
ಆ ಪ್ರಾಣವ ತಂದು
ತನ್ನ ಇಷ್ಟಲಿಂಗದಲ್ಲಿರಿಸಿ ನೆರೆಯ ಬಲ್ಲಡೆ
ಆತನೆ ಪ್ರಾಣಲಿಂಗಸಂಬಂಧಿ !
ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?

೧೦೨.
ಕದಳಿಯ ಬನವ ಹೊಕ್ಕು
ಹೊಲಬ ತಿಳಿಯದನ್ನಕ್ಕ,
ಬಯಲ ಗಾಳಿಯ ಹಿಡಿದು
ಘಟ್ಟಿ ಮಾಡದನ್ನಕ್ಕ,
ಬಱಿದೆ ಬಹುದೇ ಶಿವಜ್ಞಾನ ?
ಷಡುವರ್ಗವಳಿಯದನ್ನಕ್ಕ
ಅಷ್ಟಮದವಳಿಯದನ್ನಕ್ಕ
ಬಱಿದೆ ಬಹುದೇ ಶಿವಸಂಪದ ?
ಮದಮತ್ಸರವ ಮಾಡಲಿಲ್ಲ !
ಹೊದಕುಳಿಗೊಳಲಿಲ್ಲ
ಗುಹೇಶ್ವರಲಿಂಗ ಕಲ್ಪಿತದೊಳಗಲ್ಲ !

೧೦೩.
ಶಬ್ದ ಸ್ಪರ್ಶ ರೂಪ ರಸ ಗಂಧ
ಪಂಚೇಂದ್ರಿಯ ಸಪ್ತಧಾತು ಅಷ್ಟಮದದಿಂದ
ಮುಂದುಗಾಣದವರು ನೀವು ಕೇಳಿರೇ !
ಲಿಂಗವಾರ್ತೆಯ ವಚನರಚನೆಯ
ಮಾತನಾಡುವಿರಯ್ಯ !
ಸಂಸಾರದ ಮುಚ್ಚು ಬಿಡದನ್ನಕ್ಕರ
ಸೂಕ್ಷ್ಮಶಿವಪಥವು ಸಾಧ್ಯವಾಗದು.
ಗುಹೇಶ್ವರಲಿಂಗದಲಿ
ವಾಕು ಪಾಕವಾದಡೇನು ?
ಮನ ಪಾಕವಾಗದನ್ನಕ್ಕರ ?!

೧೦೪.
ಮರ್ತ್ಯಲೋಕದ ಮಾನವರು
ದೇಗುಲದೊಳಗೊಂದು ದೇವರ ಮಾಡಿದಡೆ
ಆನು ಬೆಱಗಾದೆನಯ್ಯ !
ನಿಚ್ಚಕ್ಕೆ ನಿಚ್ಚ ಅರ್ಚನೆಪೂಜನೆಯ ಮಾಡಿಸಿ
ಭೋಗವ ಮಾಡುವರ ಕಂಡು ನಾನು ಬೆಱಗಾದೆನು
ಗುಹೇಶ್ವರ,
ನಿಮ್ಮ ಶರಣರು ಹಿಂದೆ ಲಿಂಗವನಿರಿಸಿ ಹೋದರು.

೧೦೫.
ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿ
ಕಾಯದ ಕೈಯಲ್ಲಿ ಕಾರ್ಯವುಂಟೆ ?
ವಾಯಕ್ಕೆ ಬಳಲುವರು ನೋಡಾ !
ಎತ್ತನೇಱಿ ಎತ್ತನಱಸುವರು ಎತ್ತ ಹೋದರೈ
ಗುಹೇಶ್ವರ ?

೧೦೬.
ಹೊಟ್ಟೆಯ ಮೇಲೆ
ಕಟ್ಟೋಗರದ ಮೊಟ್ಟೆಯ ಕಟ್ಟಿದರೇನು?
ಹಸಿವು ಹೋಹುದೇ ?
ಅಂಗದ ಮೇಲೆ ಲಿಂಗ ಸ್ವಾಯತವಾದರೇನು ?
ಭಕ್ತನಾಗಬಲ್ಲನೆ ?
ಇಟ್ಟ ಕಲ್ಲು ಮೆಳೆಯ ಮೇಲೆ ಸಿಕ್ಕಿದಡೆ
ಆ ಕಲ್ಲು ಲಿಂಗವೆ ?
ಆ ಮೆಳೆ ಭಕ್ತನೆ ?
ಇಟ್ಟಾತ ಗುರುವೆ ?
ಇಂತಪ್ಪನವರ ಕಂಡರೆ ನಾಚುವೆನಯ್ಯ ಗುಹೇಶ್ವರ.

೧೦೭.
ಇಷ್ಟಲಿಂಗವನು ಪ್ರಾಣಲಿಂಗವೆಂಬ
ಕಷ್ಟವೆಲ್ಲಿಯದೋ ?
ಇಷ್ಟಲಿಂಗ ಹೋದರೆ ಪ್ರಾಣಲಿಂಗ ಹೋಗದು ನೋಡಾ !
ಇಷ್ಟಲಿಂಗ-ಪ್ರಾಣಲಿಂಗವೆಂಬ ಬೇಧವನು
ಗುಹೇಶ್ವರ, ನಿಮ್ಮ ಶರಣ ಬಲ್ಲ.

೧೦೮.
ವ್ರತಗೇಡಿ, ವ್ರತಗೇಡಿ ಎಂಬವ ತಾನೆ ವ್ರತಗೇಡಿ,
ವ್ರತಗೆಡಲಿಕೇನು ಹಾಲಂಬಿಲವೆ ?
ವ್ರತಗೆಟ್ಟ ಬಳಿಕ ಘಟ ಉಳಿಯಬಲ್ಲುದೇ ?
ಕಾಯದೊಳಗೆ ಜೀವ ಉಳ್ಳನ್ನಕ್ಕರ
ಅದೇ ಪ್ರಾಣಲಿಂಗವು ಕಾಣಾ ಗುಹೇಶ್ವರ.

೧೦೯.
ಅಂಗದ ಕಳೆಯಲೊಂದು ಲಿಂಗವ ಕಂಡೆ
ಲಿಂಗದ ಕಳೆಯಲೊಂದು ಅಂಗವ ಕಂಡೆ !
ಅಂಗದ ಲಿಂಗದ ಸಂದಣಿಯನಱಸಿ ಕಂಡೆ ನೋಡಿರೇ !
ಇಲ್ಲಿ ಐದಾನೆ ಶಿವನು !
ಬಲ್ಲಡೆ ಇರಿಸಿಕೊಳ್ಳಿರೇ ಕಾಯವಳಿಯದ ಮುನ್ನ !!
ನೋಡಬಲ್ಲಡೆ ಗುಹೇಶ್ವರಲಿಂಗಕ್ಕೆ ಬೇರೆ ಠಾವುಂಟೆ ಹೇಳಿರೇ.

೧೧೦.
ಪೂಜಿಸಿ ಕೆಳಯಿಂಕೆ ಇಳುಹಲದೇನೋ ?
ಅನಾಗತ ಪೂಜೆಯ ಮಾಡಲದೇನೋ ?
ದೇಹವೇ ಪಿಂಡಿಗೆ
ಜೀವವೇ ಲಿಂಗ-ಗುಹೇಶ್ವರ.

೧೧೧.
ಅಱಿದಱಿದು ಅಱಿವು ಬಱುದೊಱಿವೋಯಿತ್ತು !
"ಕುಱುಹ[ತೋಱ]ದಡೆಂತೂ ನಂಬರು,
ತೆಱಹಿಲ್ಲದ ಘನವ ನೆನೆದು
ಗುರುಶರಣೆಂಬುದಲ್ಲದೆ ಮಱಹು ಬಂದೀತೆಂ"ದು
ಗುರು ಕುಱುಹ ತೋಱಿದನಲ್ಲದೆ
ಬಲ್ಲಡೆ ಗುಹೇಶ್ವರಲಿಂಗವು ಹೃದಯದಲೈದಾನೆ.

೧೧೨.
ಉದಕ ಮೂರುತಿಯಾಗಿ
ಉದಯವಾಯಿತ್ತು ಪಿಂಡಿಗೆಯಲ್ಲಿ
ಮೂಲ ಸ್ಥಾನ ಸ್ಥಾಪ್ಯವಾಯಿತ್ತು
ಸ್ವದೇಹಶಿವಪುರದಲ್ಲಿ !
ವಾಯು ಪೂಜಾರಿಯಾಗಿ
ಪರಿಮಳದಿಂಡೆದಂಡೆಯ ಕಟ್ಟಿ
ಪೂಜಿಸುತ್ತಿರ್ದುದೋ ನವದ್ವಾರಶಿವಾಲಯದಾದಿಮಧ್ಯಸ್ಥಾನದಲ್ಲಿ
ಗುಹೇಶ್ವರನೆಂಬುದಲ್ಲಿಯೆ ನಿಂದಿತ್ತು.

೧೧೩.
ಕಾಲೇ ಕಂಭಗಳಾದವೆನ್ನ
ದೇಹವೇ ದೇಗುಲವಾದುವಯ್ಯ !
ಎನ್ನ ನಾಲಗೆಯೆ ಘಂಟೆ
ಶಿರ ಸುವರ್ಣದ ಕಳಸವಿದೇನಯ್ಯ !
ಸ್ವರವೇ ಲಿಂಗಕ್ಕೆ ಸಿಂಹಾಸನವಾಗಿರ್ದುದು !
ಗುಹೇಶ್ವರ,
ನಿಮ್ಮ ಪ್ರಾಣಲಿಂಗಪ್ರತಿಷ್ಠೆ ಪಲ್ಲಟವಾಗದಂತಿದ್ದೆನಯ್ಯ.

೧೧೪.
ಪ್ರಾಣಲಿಂಗಕ್ಕೆ ಕಾಯವೇ ಸೆಜ್ಜೆ
ಆಕಾಶಗಂಗೆಯಲ್ಲಿ ಮಜ್ಜನ
ಹೂವಿಲ್ಲದ ಪರಿಮಳದ ಪೂಜೆ
ಹೃದಯಕಮಲದಲ್ಲಿ ಶಿವಶಿವಾ ಎಂಬ ಶಬ್ದ
ಇದು ಅದ್ವೈತ ಕಾಣಾ ಗುಹೇಶ್ವರ.

೧೧೫.
ಹೊತ್ತಾರೆ ಪೂಜಿಸಲುಬೇಡ ಕಂಡಾ !
ಬೈಗೆ ಪೂಜಿಸಲುಬೇಡ ಕಂಡಾ !
ಇರುಳುವನೂ ಹಗಲುವನೂ ಕಳೆದು ಪೂಜಿಸಬೇಕು ಕಂಡಾ !
ಇಂತಪ್ಪ ಪೂಜೆಯ ಪೂಜಿಸುವರ
ಎನಗೆ ತೋಱಯ್ಯ ಗುಹೇಶ್ವರ.

೧೧೬.
ಅಂಗದಲ್ಲಿ ಮಾಡುವ ಸುಖವದು
ಲಿಂಗಕ್ಕೆ ಭೂಷಣವಾಯಿತ್ತು.
ಕಾಡುಗಿಚ್ಚಿನ ಕೈಯಲ್ಲಿ
ಕರಡವ ಕೊಯ್ಸುವಂತೆ-
ಹಿಂದೆ ಮೆದೆಯಿಲ್ಲ !
ಮುಂದೆ ಹುಲ್ಲಿಲ್ಲ !!
ಅಂಗ-ಲಿಂಗವೆಂಬನ್ನಕ್ಕರ ಫಲದಾಯಕ,
ಲಿಂಗೈಕ್ಯವದು ಬೇಱೆ ಗುಹೇಶ್ವರ.

೧೧೭.
ಎನ್ನ ಮನದ ಕೊನೆಯ ಮೊನೆಯ ಮೇಲೆ
ಅಂಗವಿಲ್ಲದ ರೂಪನ ಕಂಡು ಮರುಳಾದೆನವ್ವ !
ಆತನ ಕಂಡು ಬೆಱಗಾದೆನವ್ವ-
ಎನ್ನಂತರಂಗದ ಆತುಮನೊಳಗೆ
ಅನಿಮಿಷನಿಜೈಕ್ಯ ಗುಹೇಶ್ವರನ ಕಂಡು !

೧೧೮.
ಮನದ ಸುಖವ ಕಂಗಳಿಗೆ ತಂದರೆ
ಕಂಗಳ ಸುಖವ ಮನಕ್ಕೆ ತಂದರೆ
ನಾಚಿತ್ತು, ಮನ ನಾಚಿತ್ತು !
ಸ್ಥಾನಪಲ್ಲಟವಾದಡೆ
ವ್ರತಕ್ಕೆ ಭಂಗ ಗುಹೇಶ್ವರ.

೧೧೯.
ಎನಗೊಂದು ಲಿಂಗ
ನಿನಗೊಂದು ಲಿಂಗ
ಮನೆಗೊಂದು ಲಿಂಗವಾಯಿತ್ತು !
ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ !
ಉಳಿ ಮುಟ್ಟಿದ ಲಿಂಗವ
ಮನ ಮುಟ್ಟಬಲ್ಲುದೇ ಗುಹೇಶ್ವರ ?

೧೨೦.
ಅರಳಿಯ ಮರದ ಮೇಲೆ
ಒಂದು ಹಂಸೆ ಗೂಡನಿಕ್ಕಿತ್ತ ಕಂಡೆ !
ಆ ಗೂಡಿನೊಳಗೊಬ್ಬ ಹೆಂಗೂಸು
ಉಯ್ಯಾಲೆಯಾಡುತ್ತಿದ್ದಳು.
ಉಯ್ಯಾಲೆ ಹಱಿದು
ಹೆಂಗೂಸು ನೆಲಕ್ಕೆ ಬಿದ್ದು ಸತ್ತಡೆ
ಪ್ರಾಣಲಿಂಗವ ಕಾಣಬಹುದು ಕಾಣಾ ಗುಹೇಶ್ವರ.

೧೨೧.
ಪೃಥ್ವಿಗೆ ಹುಟ್ಟಿದ ಶಿಲೆ
ಕಲ್ಲುಕುಟಿಕಂಗೆ ಹುಟ್ಟಿದ ಮೂರುತಿ
ಮಂತ್ರಕ್ಕೆ ಲಿಂಗವಾಯಿತ್ತಲ್ಲಾ !
ಆ ಮೂವರಿಗೆ ಹುಟ್ಟಿದ ಮಗನ
ಲಿಂಗವೆಂದು ಕೈವಿಡಿವ
ಅಚ್ಚವ್ರತಗೇಡಿಗಳನೇನೆಂಬೆ ಗುಹೇಶ್ವರ.

೧೨೨.
ಮೂಱು ಪುರದ ಹೆಬ್ಬಾಗಿಲೊಳಗೊಂದು
ಕೋಡಗ ಕಟ್ಟಿದುದ ಕಂಡೆ !
ಅದು ಕಂಡಕಂಡವರನೇಡಿಸುತ್ತಿದ್ದಿತು ನೋಡಾ !
ಪುರದರಸು ತನ್ನ ಪಾಯದಳ ಸಹಿತ ಬಂದರೆ
ಒಂದೇ ಬಾರಿ ಮುಱಿದು ನುಂಗಿತ್ತ ಕಂಡೆ !
ಆ ಕೋಡಗಕ್ಕೆ ಒಡಲುಂಟು, ತಲೆಯಿಲ್ಲ ;
ಕಾಲುಂಟು, ಹೆಜ್ಜೆಯಿಲ್ಲ ;
ಕೈಯುಂಟು, ಬೆರಳಿಲ್ಲ ;
ಇದು ಕರಚೋದ್ಯ ನೋಡಾ !
ತನ್ನ ಕರೆದವರ ಮುನ್ನವೇ ತಾ ಕರೆವುದು ಆ ಕೋಡಗ
ತನ್ನ ಬಸಿಱಲ್ಲಿ ಬಂದ ಮದಗಜದ ನೆತ್ತಿಯನೇಱಿ
ಗಾಳಿಯ ಧೂಳಿಯ ಕೂಡಿ ಓಲಾಡುತ್ತಿಹುದ ಕಂಡೆ !
ವಾಯದ ಗಗನದ ಮೇಲೆ
ತನ್ನ ಕಾಯವ ಪುಟನೆಗೆದು ತೋಱುತ್ತಿಹುದ ಕಂಡೆ !
ಹತ್ತು ಮುಖದ ಸರ್ಪನ
ತನ್ನ ಹೇಳಿಗೆಯೊಳಗಿಕ್ಕಿ ಆಡಿಸುತ್ತಿಹುದ ಕಂಡೆ !
ಐವರು ಕೊಡಗೂಸುಗಳ ಕಣ್ಣಿಂಗೆ
ಕಣ್ಣಡವ ಕಟ್ಟುತ್ತಿಹುದ ಕಂಡೆ !
ಹತ್ತು ಕೇರಿಗಳೊಳಗೆ ಸುಳಿವ ಹರಿಯ ನೆತ್ತಿಯ ಮೆಟ್ಟಿ
ಹುಬ್ಬನಾಡಿಸುವುದ ಕಂಡೆ !
ಆ ಕೋಡಗದ ಕೈಯಲ್ಲಿ ಮಾಣಿಕ್ಯವ ಕೊಟ್ಟಡೆ
ನೋಡುತ್ತ ನೋಡುತ್ತ ಬೆಱಗಾದುದು ಕಂಡೆ !
ಕೂಡಲಿಲ್ಲ ಕಳೆಯಲಿಲ್ಲ ! ಗುಹೇಶ್ವರನ ನಿಲುವು
ಪ್ರಾಣಲಿಂಗ ಸಂಬಂಧವಿಲ್ಲದವರಿಗೆ ಕಾಣಬಾರದು.

೧೨೩.
ಕಲ್ಲ ಮನೆಯ ಮಾಡಿ
ಕಲ್ಲ ದೇವರ ಮಾಡಿ
ಆ ಕಲ್ಲು ಕಲ್ಲ ಮೇಲೆ ಕೆಡೆದರೆ
ದೇವರೆತ್ತ ಹೋದರೋ?
ಲಿಂಗಪ್ರತಿಷ್ಠೆಯ ಮಾಡಿದವಂಗೆ
ನಾಯಕನರಕ ಗುಹೇಶ್ವರ.

೧೨೪.
ದೇಹವೇ ದೇವಾಲಯವಾಗಿದ್ದ ಮೇಲೆ
ಮತ್ತೆ ಬೇರೆ ದೇಗುಲಕ್ಕೆ ಎಡೆಯಾಡುವರಿಗೆ
ಏನ ಹೇಳುವೆನಯ್ಯ ?
ಗುಹೇಶ್ವರ, ನೀ ಕಲ್ಲಾದೆಡೆ ನಾನೇನಪ್ಪೆನು ?!

೧೨೫.
ಒಡಲುವಿಡಿದು ಪಾಷಾಣಕ್ಕೆ ಹಂಗಿಗರಾದರಲ್ಲಾ !
ಅಂಗಸಂಗಿಗಳೆಲ್ಲಾ ಮಹಾಘನವನಱಿಯದೆ ನಿಂದರೊ !
ಹುಸಿಯನೆ ಕೊಯ್ದು
ಹುಸಿಯನೆ ಪೂಜಿಸಿ
ಗಸಣಿಗೊಳಗಾದರು ಗುಹೇಶ್ವರ.